ಬೆಂಗಳೂರು: ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ನಾಳೆ ಸಾರ್ವಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ, ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಅವರು ಮನವಿ ಮಾಡಿದರು.
ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್ ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ಸ್ ನೀರು ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ಸ್ ನೀರು ಹೋಗುತ್ತಿರಬಹುದು ಎಂದು ತಿಳಿಸಿದರು.