ಗದಗ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗದಗ ಶಾಸಕ ಎಚ್.ಕೆ. ಪಾಟೀಲ್ (H.K. Patil) ಅವರಿಗೆ ಸಚಿವ ಸ್ಥಾನ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಗದಗ-ಬೆಟಗೇರಿ ನಗರಸಭೆಯ 22 ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನಗರಸಭೆ ಸದಸ್ಯರು, ಜಿಲ್ಲಾಧಿಕಾರಿ ಸಿ.ಎ. ಶ್ರೀಧರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ರಾಜೀನಾಮೆ ನೀಡಿದ 22 ಸದಸ್ಯರಲ್ಲಿ 17 ಮಂದಿ ಕಾಂಗ್ರೆಸ್ನಿಂದ ಗೆದ್ದ ಜನಪ್ರತಿನಿಧಿಗಳಾಗಿದ್ದರೆ, ಉಳಿದ 5 ಮಂದಿ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.
ಎಚ್.ಕೆ. ಪಾಟೀಲ್ ಅವರು ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ರಾಜ್ಯ ಮತ್ತು ಗದಗ ಜಿಲ್ಲೆಯ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಂತಹ ಹಿರಿಯ ನಾಯಕನನ್ನು ಸಂಪುಟದಿಂದ ಕೈಬಿಟ್ಟಿರುವುದು ತೀವ್ರ ಅನ್ಯಾಯ ಎಂದು ಬೆಂಬಲಿಗರು ಹಾಗೂ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ರಾಜ್ಯದ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.
ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಅವರ ಅಭಿಮಾನಿ ರಾಚಪ್ಪ ಗಡಾದ್ ಎನ್ನುವವರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಪಾಟೀಲ್ ಅವರ ಹೆಸರು ಇಲ್ಲದಿರುವುದನ್ನು ಖಂಡಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಶರ್ಟ್ ತೆಗೆದು “ಎಚ್.ಕೆ. ಪಾಟೀಲ್ಗೆ ಸಚಿವ ಸ್ಥಾನ ಸಿಗುವವರೆಗೂ ನಾನು ಶರ್ಟ್ ಧರಿಸುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದ್ದಾರೆ.
ಎನ್.ಎ. ಹ್ಯಾರಿಸ್ ಬೆಂಬಲಿಗರ ಪ್ರತಿಭಟನೆ: ಬೆಂಗಳೂರಿನ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಶಾಂತಿನಗರದ ಅವರ ನೂರಾರು ಬೆಂಬಲಿಗರು ಬ್ರಿಗೇಡ್ ರಸ್ತೆಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ರಸ್ತೆ ತಡೆಗೆ ಯತ್ನಿಸಿದ ಸುಮಾರು 20 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಎಚ್.ಸಿ. ಮಹದೇವಪ್ಪ ಬೆಂಬಲಿಗರ ರಾಜೀನಾಮೆ: ಮೈಸೂರು ಜಿಲ್ಲೆಯ ಟಿ. ನರಸೀಪುರ ಶಾಸಕ ಎಚ್.ಸಿ. ಮಹದೇವಪ್ಪ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಪದಾಧಿಕಾರಿಗಳು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ರವಾನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
