ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 370 ಬಾಂಗ್ಲಾ ಪ್ರಜೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 196 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲೆಲ್ಲಿ ಎಷ್ಟು ಜನ?: ಗುರುತಿಸಲಾದ 370 ಜನರಲ್ಲಿ ಅತಿ ಹೆಚ್ಚು ಅಂದರೆ 284 ಮಂದಿ ಬೆಂಗಳೂರಿನಲ್ಲಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ 37, ಶಿವಮೊಗ್ಗದಲ್ಲಿ 12 ಮತ್ತು ಹಾಸನದಲ್ಲಿ 3 ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಲಾಗಿದೆ.
ಹಲವು ನಗರಗಳಿಗೆ ವಲಸೆ: ಅಕ್ರಮ ವಲಸಿಗರು ಸಾಮಾನ್ಯವಾಗಿ ಕೋಲ್ಕತ್ತಾ ಮೂಲಕ ದೇಶದ ಒಳಗೆ ನುಸುಳುತ್ತಾರೆ. ಅಲ್ಲಿಂದ ಕೆಲಸ ಅರಸಿ ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ವಲಸೆ ಹೋಗುತ್ತಾರೆ ಎಂದು ಸಚಿವರು ವಿವರಿಸಿದರು.
ಲಕ್ಷಾಂತರ ಜನರಿದ್ದಾರೆ ಎಂಬ ಆರೋಪ ತಳ್ಳಿಹಾಕೆ: ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾ ವಲಸಿಗರಿದ್ದಾರೆ ಎಂಬ ವಿರೋಧ ಪಕ್ಷದ ಆರೋಪವನ್ನು ಸಚಿವರು ನಿರಾಕರಿಸಿದರು. “ಇಷ್ಟು ದೊಡ್ಡ ಸಂಖ್ಯೆಯಲ್ಲಿ ಅವರು ಇಲ್ಲಿರುವುದನ್ನು ನಾನು ಒಪ್ಪುವುದಿಲ್ಲ, ಆದರೆ ಅಕ್ರಮ ವಲಸಿಗರ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದರು.
ಪ್ರತ್ಯೇಕ ಕಾರ್ಯಪಡೆ: ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಪ್ರತ್ಯೇಕ ಕಾರ್ಯಪಡೆ (Special Task Force) ರಚಿಸಲಾಗಿದೆ. ರಾಜ್ಯ ಸರ್ಕಾರ ವಲಸಿಗರನ್ನು ಪತ್ತೆ ಹಚ್ಚುವ ಕೆಲಸ ಮಾಡಿದರೆ, ಕೇಂದ್ರ ಸರ್ಕಾರ ಅವರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಡೆಸುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ನಡೆದ ಚರ್ಚೆಯ ವೇಳೆ ಬಿಜೆಪಿ ಸದಸ್ಯರ ಆಕ್ಷೇಪಗಳಿಗೆ ಉತ್ತರಿಸುತ್ತಾ ಪರಮೇಶ್ವರ ಅವರು ಈ ವಿವರಗಳನ್ನು ನೀಡಿದ್ದಾರೆ. ಈ ವೇಳೆ ಪುನೀತ್ ಕೆರೆಹಳ್ಳಿ ವಿಚಾರವಾಗಿಯೂ ಸದನದಲ್ಲಿ ಪರ-ವಿರೋಧದ ಚರ್ಚೆಗಳು ನಡೆದವು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


