ತುಮಕೂರು: ಚಿತ್ರದುರ್ಗದಲ್ಲಿ ಮೇ 9 ರಂದು ಹಮ್ಮಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಸಮಾರಂಭದಲ್ಲಿ ತುಮಕೂರು ಜಿಲ್ಲೆಯಿಂದ 50 ಸಾವಿರ ಜನ ಭಾಗವಹಿಸಲು ಈಗಾಗಲೇ ಸಿದ್ಧತೆ ನಡೆಸಿರುವುದಾಗಿ ಜಿಲ್ಲಾ ಬಿಜೆಪಿ ಮುಖಂಡರು ತಿಳಿಸಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಮೇ 9 ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಮಧ್ಯಾಹ್ನ 1.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 3 ಗಂಟೆಯ ವೇಳೆಗೆ ಅಮಿತ್ ಶಾ ಅವರು ಆಗಮಿಸಲಿದ್ದಾರೆ.
ತುಮಕೂರಿನಿಂದ ಬೆಳ್ಳಗ್ಗೆಯೇ ಹೊರಟು ಮಧ್ಯಾಹ್ನದ ವೇಳೆಗೆ ಸಮಾರಂಭದ ಬಳಿ ಸೇರುತ್ತೇವೆ. 7 ತಾಲ್ಲೂಕುಗಳ 50 ಸಾವಿರ ಜನರಿಗಾಗಿ ಒಂದು ಸಾವಿರ ಬಸ್ಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ನಿಗದಿಪಡಿಸಲಾಗಿರುವ ಬಸ್ಗಳಲ್ಲಿ ಜನ ಚಿತ್ರದುರ್ಗಕ್ಕೆ ತೆರಳಲಿದ್ದಾರೆ ಎಂದು ವಿವರಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ಶಂಕರ್ ಮಾತನಾಡಿ, ನಮ್ಮೆಲ್ಲರ ಹಿರಿಯರು, ಪಕ್ಷಕ್ಕಾಗಿ ದುಡಿದ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ಯಶಸ್ವಿಗೆ ನಾವೆಲ್ಲಾ ಒಟ್ಟಾಗಿ ಶ್ರಮಿಸುತ್ತಿದ್ದು, ಒಂದು ಸಾವಿರ ಬಸ್ ಗಳಲ್ಲದೆ, ಪಕ್ಷದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ವಾಹನಗಳೂ ಸೇರಿದಂತೆ ಇನ್ನೂ ಹೆಚ್ಚಿನ ವಾಹನ ಮತ್ತು ಜನ ಸೇರುವ ನಿರೀಕ್ಷೆ ಇದೆ ಎಂದರು.
ಗ್ರಾಮಾಂತರ ಶಾಸಕ ಬಿ. ಸುರೇಶ್ ಗೌಡ ಮಾತನಾಡಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಬಿ.ಎಸ್. ಯಡಿಯೂರಪ್ಪ ಅವರ ಪರಿಶ್ರಮ ಅಪಾರ. ಮುನ್ಸಿಪಲ್ ಸದಸ್ಯನಿಂದ ಹಿಡಿದು ಮುಖ್ಯಮಂತ್ರಿಯ ತನಕ ಅವರ ಹೋರಾಟ ಅವಿಸ್ಮರಣೀಯ. ಅವರ ಕಾಲದಲ್ಲಿ ಜಾರಿಗೆ ತಂದ ಯೋಜನೆಗಳನ್ನು ಜನ ಈಗಲೂ ಸ್ಮರಿಸುತ್ತಾರೆ. ಹೆಣ್ಣು ಮಕ್ಕಳಿಗೆ ಸೈಕಲ್ ಯೋಜನೆ, ಭಾಗ್ಯಲಕ್ಷ್ಮಿ, ತುಮಕೂರು ಜಿಲ್ಲೆಯ ಹೊನ್ನವಳ್ಳಿ ಮತ್ತು ಹೆಬ್ಬೂರು ಎತ ನೀರಾವರಿ ಯೋಜನೆ, ಹೇಮಾವತಿ ನಾಲೆಗೆ ಹಣ ಬಿಡುಗಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೆರವಾಗಿದ್ದಾರೆ ಎಂದು ವಿವರಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ನಗರ ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಪಕ್ಷದ ಮುಖಂಡರುಗಳಾದ ವೈ.ಹೆಚ್.ಹುಚ್ಚಯ್ಯ, ಶಿವಕುಮಾರ್ ಸ್ವಾಮಿ, ವೇದಮೂರ್ತಿ, ಜಗದೀಶ್ ಇತರರಿದ್ದರು.
ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ಧ ಜನ ಬೇಸತ್ತಿದ್ದಾರೆ. ಹೀಗಾಗಿ 2028ರ ವೇಳೆಗೆ ಜನ ನಮ್ಮನ್ನು ಆಯ್ಕೆ ಮಾಡಲಿದ್ದಾರೆ. 150 ಜನರ ಸಂಖ್ಯಾಬಲ ನಮ್ಮದಾಗಲಿದೆ.
— ಬಿ. ಸುರೇಶ್ ಗೌಡ, ಶಾಸಕರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


