ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆರೆಯನ್ನು ಗ್ರಾಮಸ್ಥರಿಂದ ಹಸ್ತಾಂತರ ಪಡೆದು ಪುನಶ್ಚೇತನಗೊಳಿಸಿ, ಬಳಿಕ ಗ್ರಾಮಸ್ಥರಿಗೆ ಮರಳಿ ಹಸ್ತಾಂತರಿಸಲಾಯಿತು.
ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಸ್ಥಳೀಯ ರೈತರ ಸಹಕಾರದೊಂದಿಗೆ 10 ಎಕರೆಗೂ ಅಧಿಕ ವಿಸ್ತೀರ್ಣದ ಕೆರೆಯನ್ನು ಸ್ವಚ್ಛಗೊಳಿಸಿ ಅಭಿವೃದ್ಧಿ ಪಡಿಸಲಾಗಿದ್ದು, ಯೋಜನೆಯ ವತಿಯಿಂದ ಇದುವರೆಗೆ ಪುನರುಜ್ಜೀವನಗೊಳಿಸಲಾದ 963ನೇ ಕೆರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿಧರ ಹಾಲಪ್ಪ ಅವರು ಕೆರೆಗೆ ಪೂಜೆ ಸಲ್ಲಿಸಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಈ ಕೆರೆ ಸ್ಥಳೀಯ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ನೀರಿನ ಮೂಲವಾಗಿ ಉಪಯೋಗವಾಗಲಿದ್ದು, ಗ್ರಾಮೀಣ ಪ್ರದೇಶದ ಜಲ ಸಂರಕ್ಷಣೆಗೆ ಇಂತಹ ಯೋಜನೆಗಳು ಅತ್ಯಂತ ಅಗತ್ಯ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಅನಿತಾ , “ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ಅಮ್ಮ ಅವರ ಆಶೀರ್ವಾದದಿಂದ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಯೋಜನೆ ಮೂಲಕ ಜಾರಿಗೊಳಿಸಲಾಗುತ್ತಿದೆ. ಅಂಗವಿಕಲರಿಗೆ ನೆರವು, ವೃದ್ಧಾಪ್ಯ ವೇತನ, ದೇವಾಲಯಗಳ ಅಭಿವೃದ್ಧಿ, ಹಾಲು ಉತ್ಪಾದಕರಿಗೆ ಸಹಾಯಧನ, ಆರೋಗ್ಯ ಶಿಬಿರಗಳು, ರುದ್ರಭೂಮಿ ಅಭಿವೃದ್ಧಿ, ಶುದ್ಧ ಕುಡಿಯುವ ನೀರಿನ ಘಟಕಗಳು, ವಾತ್ಸಲ್ಯ ಯೋಜನೆಯಡಿ ನಿರ್ಗತಿಕರಿಗೆ ಮನೆ ನಿರ್ಮಾಣ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗಂಗಣ್ಣ, ಹನುಮಣ್ಣ, ರಾಹುಲ್, ಎಲ್. ರಾಜಣ್ಣ, ಮಮತಾ, ಜಗದೀಶ್, ಪವಿತ್ರ, ವೆಂಕಟಾಚಲಪತಿ, ರಾಜೇಶ್ವರಿ, ಮಹೇಂದ್ರ, ಮನು, ಶ್ರೀನಿವಾಸ್, ಕಿರಣ್, ಅನುಸೂಯಮ್ಮ, ಸುಶೀಲಮ್ಮ ಸೇರಿದಂತೆ ಗ್ರಾಮಸ್ಥರು ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


