ಮಧುಗಿರಿ: ಶಾಸಕ ಎಂ.ವಿ.ವೀರಭದ್ರಯ್ಯ ಅವರನ್ನೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಒತ್ತಡ ಹೇರಲು ಮಧುಗಿರಿ ಕ್ಷೇತ್ರದಿಂದ ಕಾರ್ಯಕರ್ತರು ಹಾಗೂ ಎಂ.ವಿ.ವೀರಭದ್ರಯ್ಯ ಅಭಿಮಾನಿಗಳು ಸಹಸ್ರಾರು ವಾಹನಗಳಲ್ಲಿ ಭಾನುವಾರ ಬೆಂಗಳೂರಿಗೆ ತೆರಳಿದರು.
ಕ್ಷೇತ್ರದ ವಿವಿಧ ಗ್ರಾಮಗಳಿಂದ ವಾಹನಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ದಂಡಿನ ಮಾರಮ್ಮ ದೇವಾಲಯದ ಮುಂಭಾಗ ಜಮಾವಣೆಗೊಂಡು ಶಾಸಕ ಎಂ.ವಿ.ವೀರಭದ್ರಯ್ಯ ಅವರೇ ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಯಾಗಬೇಕೆಂದು ಆಗ್ರಹಿಸಿ ಜೈ ಕಾರ ಹಾಕಿದರು. ಎಚ್.ಡಿ.ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸೂಕ್ತ ತೀರ್ಮಾನ ಕೈ ಗೊಂಡರೆ ಕ್ಷೇತ್ರದಲ್ಲಿ ಯಾವುದೇ ಗೊಂದಲ ಉಂಟಾಗುವುದಿಲ್ಲ ಎಂದರು.
ಪುರಸಭೆ ಸದಸ್ಯ ಎಂ.ಆರ್.ಜಗನ್ನಾಥ ಮಾತನಾಡಿ, ಕ್ಷೇತ್ರದಲ್ಲಿ ಶಾಸಕ ಎಂ.ವಿ.ವೀರಭದ್ರಯ್ಯ ಅವರು ಉತ್ತಮವಾದ ಅಭಿವೃದ್ಧಿ ಕೆಲಸ – ಕಾರ್ಯಗಳನ್ನು ಮಾಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಂ.ವಿ.ವೀರಭದ್ರಯ್ಯ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಬೇಕು. ಅವರನ್ನು ಗೆಲ್ಲಿಸುವುದಕ್ಕೆ ನಾವೆಲ್ಲರೂ ಶ್ರಮ ಹಾಕಬೇಕೆಂದು ತಿಳಿಸಿದರು.
ಮುಖಂಡ ಬಿ.ಎಸ್.ಶ್ರೀನಿವಾಸ ಮಾತನಾಡಿ, ಎಂ.ವಿ.ವೀರಭದ್ರಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುವವರೆಗೂ ಯಾರನ್ನು ಕ್ಷೇತ್ರಕ್ಕೆ ಕಳುಹಿಸಬಾರದು ಎಂದು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎಲ್ಲರೂ ಸೇರಿ ಮನವಿ ಮಾಡೋಣ ಎಂದರು.
ಮುಖಂಡರಾದ ಬಾವಿ ಮನೆ ಕಾಂತರಾಜು , ತಿಮ್ಮಯ್ಯ , ದೊಡ್ಡೇರಿ ವಿಜಯ್ , ವಕೀಲ ಶಿವಣ್ಣ , ಚಂದ್ರು ಬಹುಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಇದ್ದರು.
ವರದಿ : ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy