ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಯ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ ಪಿಂಚಣಿ ಕಾಣದ ಒಂದೇ ಗ್ರಾಮದ 25 ಜನ ವೃದ್ಧರಿಗೆ ಸ್ಥಳದಲ್ಲಿಯೇ ಪಿಂಚಣಿ ಮಂಜೂರಾತಿ ಪತ್ರವನ್ನು ತಹಶೀಲ್ದಾರ್ ನಹಿದಾ ಜಮ್ ಜಮ್ ನೀಡಿದರು.
ಬಳಿಕ ಮಾತನಾಡಿದ ಅವರು, ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಈ ಬಾರಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಿನ್ನೆಪಾಳ್ಯ ಗ್ರಾಮದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಮ್ಮ ಈ ಗ್ರಾಮದಲ್ಲಿ ಇರುತ್ತಾರೆ. ಸ್ಥಳೀಯ ಸಾರ್ವಜನಿಕರ ಕುಂದು ಕೊರತೆಗಳ ಸಮಸ್ಯೆಗಳನ್ನು ಬಗೆಹರಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಇದರಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಸುಮಾರು 47 ಅರ್ಜಿಗಳು ನಮ್ಮ ಬಳಿ ಸಾರ್ವಜನಿಕರು ಕೊಟ್ಟಿದ್ದಾರೆ. ಕೂಡಲೇ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಜತೆಗೆ ಇದೇ ಗ್ರಾಮದ 25 ವೃದ್ಧರಿಗೆ ಪಿಂಚಣಿ ಪ್ರಮಾಣ ಪತ್ರವನ್ನು ವಿತರಿಸಿದ್ದೇವೆ. ಹಾಗೆಯೇ ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆಗೆ ಸಂಬಂಧಿಸಿದಂತೆ ಸುಮಾರು ವರ್ಷಗಳಿಂದ ಶೌಚಾಲಯ ಹಾಗೂ ಕಾಂಪೌಂಡ್ ಇಲ್ಲದಿರುವುದು ನಮ್ಮ ಗಮನಕ್ಕೆ ಬಂದಿತ್ತು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಲಾಯಿತು ಎಂದು ತಿಳಿಸಿದರು.
ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಹರೀಶ್ ಬಾಬು ಮಾತನಾಡಿ, ಅನೇಕ ವರ್ಷಗಳಿಂದ ನಮ್ಮ ಶಾಲೆಯ ಮಕ್ಕಳಿಗೆ ಶೌಚಾಲಯಗಳು ಇಲ್ಲದಿರುವ ಕಾರಣ ಬಯಲಿಗೆ ಹೋಗಿ ಬರುತ್ತಿರುವ ಮಕ್ಕಳ ಜವಾಬ್ದಾರಿ ಯಾರು ತೆಗೆದುಕೊಳ್ಳುತ್ತಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಶೌಚಾಲಯ ಹಾಗೂ ಕಾಂಪೌಂಡ್ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದೊಡ್ಡ ಸಿದ್ದಯ್ಯ ಮಾತನಾಡಿ, ಬೋಡಬಂಡೇನಹಳ್ಳಿ ಸರ್ಕಾರಿ ಶಾಲೆ ಸೇರಿದಂತೆ ಇನ್ನುಳಿದ ತಾಲ್ಲೂಕಿನ ಯಾವುದೇ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ಹಾಗೂ ಕಾಂಪೌಂಡ್ ಸರಿಯಾಗಿ ಇಲ್ಲದಿದ್ದರೆ ಕೂಡಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ಬರುವ ಅನುದಾನಗಳು ಅಥವಾ ನರೇಗಾ ಯೋಜನೆ ಅಡಿಯಲ್ಲಿ ಶಾಲೆಗಳಿಗೆ ಶೌಚಾಲಯ ಹಾಗೂ ಕಾಂಪೌಂಡ್ ವ್ಯವಸ್ಥೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ನಿರ್ಮಿಸಿಕೊಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ತಹಶೀಲ್ದಾರ್ ನಹಿದಾ ಜಮ್ ಜಮ್ ಅವರ ಕೆಲಸವನ್ನು ಕಂಡು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz