ಬೆಂಗಳೂರಿಗೆ ಹೊಸ ರೂಪ ನೀಡಿ, ಸಮಗ್ರ ಅಭಿವೃದ್ಧಿ, ಬ್ರಾಂಡ್ ಬೆಂಗಳೂರು ಕುರಿತು ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜತೆ ಇಂದು ಸಭೆ ಮಾಡಲಾಗಿದೆ. ಎಂದು ನಾನಾ ಗಣ್ಯರ ಜತೆ ಸಭೆ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗೋಷ್ಟಿಯಲ್ಲಿ ಹೇಳಿದರು.
ಇದು ಮೊದಲ ಹಂತದ ಸಭೆ. ಈ ಸಭೆಯಲ್ಲಿ ಅನೇಕ ಮೌಲ್ಯಯುತ ಸಲಹೆ ಬಂದಿದೆ.ಎಲ್ಲರ ಅನುಭವ ಅಭಿಪ್ರಾಯ ಪಡೆಯುತ್ತಿದ್ದೇನೆ. ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದರು.
ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ,ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು. ಇಂದು ಸಭೆಗೆ ಬಂದವರು ತಮ್ಮಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದರು.
ಹೈಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ.
ನಮ್ಮಆರ್ಥಿಕತೆ ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಬೆಂಗಳೂರಿನ ಸ್ವಾಭಿಮಾನ, ಗೌರವ ಉಳಿಸಲು ಸಲಹೆ ಕೇಳಿದ್ದೇನೆ. ನಾನು ಕೆಲವು ಸಲಹೆ ಒಪ್ಪುತ್ತೇನೆ.ಎಲ್ಲರೂ ನಮಗೆ ಸಲಹೆ ನೀಡಿದ್ದು, ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ. ಫೆರಿಫೆರಲ್ ರಿಂಗ್ ರಸ್ತೆ ಜಾರಿಗೆ ಒತ್ತು ನೀಡಲಾಗುವುದು. ಬೆಂಗಳೂರು ಯೋಜಿತ ನಗರ ಅಲ್ಲ. ಒಂದೇ ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ. ಎಲ್ಲರ ಕಷ್ಟಪಟ್ಟು ಉಳಿಸಿಕೊಂಡಿರುವ ಆಸ್ತಿ ಬಗ್ಗೆ ಗೌರವಿಸಬೇಕು. ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ 2 ಮತ್ತು 3ನೇ ದರ್ಜೆ ನಗರಗಳ ಬಗ್ಗೆ ಗಮನಹರಿಸಿ ಬೆಂಗಳೂರಿನ ಮೇಲಿನ ಒತ್ತಡ ಇಳಿಸಬೇಕಿದೆ. ಈ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ನನ್ನ ಮೇಲೆ, ನಮ್ಮ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಇವರು, ಜನರು ನಂಬಿಕೆ ಇಟ್ಟಿದ್ದಾರೆ.ನಾವು ಆ ನಂಬಿಕೆ ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ. ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಚರ್ಚೆ ಆಗಿದೆಯೇ ಎಂದು ಕೇಳಿದಾಗ, ” ಅನೇಕ ವರ್ಗ, ಸಂಘ ಸಂಸ್ಥೆಗಳ ಪ್ರಮುಖರ ಜೊತೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.ಅವರು ಈ ಬಗ್ಗೆ ಸಲಹೆ ನೀಡಿದ್ದು, ನಾನು ಸಾರ್ವಜನಿಕ ಅಭಿಪ್ರಾಯ ಪಡೆದು ನಂತರ ಸರ್ಕಾರದ ವತಿಯಿಂದ ತೀರ್ಮಾನ ಮಾಡುತ್ತೇವೆ’ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


