ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ 12 ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದರು ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.
ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿತು. ಸ್ಪೀಕರ್ ಅವರನ್ನು ಭೇಟಿ ಮಾಡಿದವರಲ್ಲಿ ಮಧ್ಯಪ್ರದೇಶದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ಸೇರಿದ್ದಾರೆ. ರಾಜಸ್ಥಾನದಿಂದ, ರಾಜೀನಾಮೆ ಸಲ್ಲಿಸಿದ ಸಂಸದರಲ್ಲಿ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಸೇರಿದ್ದರೆ, ಅರುಣ್ ಸಾವೊ ಮತ್ತು ಗೋಮತಿ ಸಾಯಿ ಛತ್ತೀಸ್ ಗಢದ ಸಂಸದರಾಗಿದ್ದರು.
ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಈ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ಸೆಮಿಫೈನಲ್ ಎಂದು ಬಿಂಬಿಸಲಾಗಿದೆ.


