ಬಾಂಗ್ಲಾದೇಶದಲ್ಲಿ ರೈಲಿಗೆ ಬೆಂಕಿ ತಗುಲಿ 4 ಮಂದಿ ಸಾವು. ಭಾರತದ ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಬೆನಾಪೋಲ್ ಬಂದರು ಪಟ್ಟಣದಿಂದ ರಾಜಧಾನಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದ ಬೆನಾಪೋಲ್ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಜನವರಿ 7 ರಂದು ನಡೆಯಲಿರುವ ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಿಎನ್ಪಿ ಬಹಿಷ್ಕಾರಕ್ಕೆ ಸಂಬಂಧಿಸಿದ ಆಂದೋಲನದ ಭಾಗವಾಗಿ ಬೆಂಕಿ ಹಚ್ಚಲಾಗಿದೆ ಎಂದು ಶಂಕಿಸಲಾಗಿದೆ.
ಕಮಲಾಪುರ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ ರೈಲು ಢಾಕಾ ರೈಲು ನಿಲ್ದಾಣದತ್ತ ಚಲಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಅನೇಕ ಜನರು ಗಾಯಗೊಂಡಿದ್ದಾರೆ. ಅವರನ್ನು ಢಾಕಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಪ್ಯಾಸೆಂಜರ್ ರೈಲಿನ ನಾಲ್ಕು ಬೋಗಿಗಳು ಸುಟ್ಟು ಕರಕಲಾಗಿವೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿವೆ.
ರೈಲಿನಲ್ಲಿ 292 ಪ್ರಯಾಣಿಕರಿದ್ದರು. ಅವರಲ್ಲಿ ಹೆಚ್ಚಿನವರು ಭಾರತದಿಂದ ಮನೆಗೆ ಮರಳುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ನ ಹೆಚ್ಚುವರಿ ಪೊಲೀಸ್ ಕಮಿಷನರ್ ಮಹಿದ್ ಉದ್ದೀನ್, ಚುನಾವಣೆಗೆ ಮುನ್ನ ಜನರನ್ನು ಹೆದರಿಸುವ ಉದ್ದೇಶದಿಂದ ಬೆಂಕಿ ಸ್ಪಷ್ಟ ದಂಗೆಯಾಗಿದೆ ಎಂದು ಹೇಳಿದರು. ಅವರು ಯಾವುದೇ ರಾಜಕೀಯ ಪಕ್ಷ ಅಥವಾ ಗುಂಪುಗಳನ್ನು ಶಂಕಿಸಿದ್ದಾರೆ ಎಂದು ಹೇಳಿಲ್ಲ. ಆದರೆ ಇದಕ್ಕೆ ಕಾರಣರಾದವರನ್ನು ಶೀಘ್ರ ಪತ್ತೆ ಮಾಡಲಾಗುವುದು ಎಂದು ಹೇಳಿದರು.


