ತುಮಕೂರು: ಬೆಳ್ತಂಗಡಿಯ ಮೂವರನ್ನು ತುಮಕೂರಿನಲ್ಲಿ ಕೊಲೆಗೈದು ಕಾರಿಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಕೋರಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು 5 ಜನರನ್ನು ಕೋರಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
12 ದಿನಗಳ ಹಿಂದೆ ದಕ್ಷಿಣ ಕನ್ನಡದ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ. ಕ್ರಾನ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ತುಮಕೂರಿಗೆ ತೆರಳಿದ್ದರು.
ಈ ಮೂವರು ನಕಲಿ ಚಿನ್ನದ ದಂಧೆಯ ಆಸೆಗೆ ಬಲಿಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ‘ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ. ಕಡಿಮೆ ಬೆಲೆಗೆ ಚಿನ್ನವನ್ನು ನೀಡುತ್ತೇವೆ’ ಎಂದು ಸುಳ್ಳು ಹೇಳಿ ಆರೋಪಿಗಳು ಈ ಮೂವರನ್ನು ಹಣ ದೋಚುವ ಪ್ಲಾನ್ ಮಾಡಿ ಕರೆಸಿಕೊಂಡು ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು, ಮೂವರ ಮೃತದೇಹಗಳನ್ನು ಡಿಎನ್ ಎ ಪರೀಕ್ಷೆಗೆ ಒಳಪಡಿಸಿ ಬಳಿಕ, ಸಂಬಂಧಿಕರಿಗೆ ಶವ ಒಪ್ಪಿಸಲಿದ್ದಾರೆ.
ಇನ್ನು ಪ್ರಕರಣ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು, ಬೆಳಗ್ಗೆ ತುಮಕೂರಿಗೆ ಕಾರು ಬಂದು ಹಾದು ಹೋಗಿರುವುದು ಪತ್ತೆಯಾಗಿದೆ.
ಇನ್ನು ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಅಲರ್ಟ್ ಆಗಿರುವ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅಶೋಕ್ ಕೆ.ವಿ. ಹಾಗೂ ಐ.ಜಿ ರವಿಕಾಂತೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


