ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರ ಬಗ್ಗೆ ನಾವು ಕೇಳಿದ್ದೆವು, ನೋಡಿದ್ದೆವು. ಆದರೀಗ ಅಚ್ಚರಿ ಎಂಬಂತೆ ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಮಠಾಧೀಶರು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ಇನ್ನುಮುಂದೆ ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಯಾಕೆ ಈ ಆದೇಶ?:
ಸಂಸ್ಥೆಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.
ಆದರೆ ಅಲ್ಲಿ ಹುಟ್ಟುಹಬ್ಬವನ್ನು ಆಚರಿಸಿ, ಕೇಕ್ ಕತ್ತರಿಸಿ ಅದ್ಧೂರಿಯಾಗಿ ಆಚರಣೆ ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮಕ್ಕಳ ಮನಸ್ಸಿಗೆ ಆಘಾತವಾಗಿ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ. ಹೀಗಾಗಿ ಹುಟ್ಟುಹಬ್ಬ ಆಚರಣೆ ಬೇಡ ಎನ್ನಲಾಗಿದೆ.
ಇದರ ಬದಲಿಗೆ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸನ್ನಡತೆ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಿ ಎಂದೂ ಸರ್ಕಾರ ಸಲಹೆ ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


