ಯಕೃತ್ ಕ್ಯಾನ್ಸರ್ ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್ ಕಸಿ ನಡೆಸಲಾಗಿದೆ.
ಇಲ್ಲಿನ ಖಾಸಗಿ ಆಸ್ಪತ್ರೆಯ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸಕ ಡಾ.ಕಿಶೋರ್ ಜಿ.ಎಸ್.ಬಿ. ಮತ್ತು ಡಾ ಪಿಯೂಷ್ ಸಿನ್ಹಾ ಹಾಗೂ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಬಿ.ಎಸ್. ರವೀಂದ್ರ ಅವರ ತಂಡ ಯಶಸ್ವಿಯಾಗಿ ಈ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಲಿವರ್ ಟ್ರಾನ್ಸ್ ಪ್ಲಾಂಟ್ ಸರ್ಜನ್ ಡಾ.ಕಿಶೋರ್ ಜಿಎಸ್ ಬಿ, ಮತ್ತು ಡಾ.ಪಿಯೂಷ್ ಸಿನ್ಹಾ ಹೇಳಿದಿಷ್ಟು!
2021 ರಲ್ಲಿ 52 ವರ್ಷದ ಲೀಲಾ ಎಂಬುವವರು ಕಾಮಾಲೆ ಕಾಯಿಲೆಗೆ ತುತ್ತಾದರು. ಇದರ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ ಲಿವರ್ ಸಿರೋಸಿಸ್ ಇರುವುದು ಪತ್ತೆಯಾಯಿತು. ಬಳಿಕ ಅವರು ಆಸ್ಪತ್ರೆಗೆ ದಾಖಲಾದರು. ದೀರ್ಘಕಾಲದಿಂದ ಯಕೃತ್ ನ ಕಾಯಿಲೆ ಇರುವ ಕಾರಣ ಅವರ ಯಕೃತ್ ನಲ್ಲಿ ದ್ರವದ ಶೇಖರಣೆಯಾಗಿ ಯಕೃತ್ ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇದರಿಂದ ಅವರ ಜೀವನ ಶೈಲಿಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿತ್ತು. ಅವರನ್ನು ಮತ್ತಷ್ಟು ತಪಾಸಣೆಗೆ ಒಳಪಡಿಸಿದ ಬಳಿಕ ಪಿತ್ತರಸ ನಾಳದಲ್ಲಿ ಕಲ್ಲು ಇರುವುದು ಪತ್ತೆಯಾಯಿತು. ಗ್ಯಾಸ್ಟ್ರೋ ತಂಡವು ಈ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ವೇಳೆ ಆಕೆಗೆ ಯಕೃತ್ ನ ಕ್ಯಾನ್ಸರ್ ಪ್ರಾರಂಭಿಕ ಹಂತದಲ್ಲಿರುವುದು ಸಹ ತಿಳಿದುಬಂತು.
ಹೀಗಾಗಿ ಆಕೆಗೆ ಲಿವರ್ ಸಿರೋಸಿಸ್ ಮತ್ತು ಯಕೃತ್ತಿನ ಕ್ಯಾನ್ಸರ್ ಗೆ ಕೂಡಲೇ ಯಕೃತ್ ಕಸಿ ಅಗತ್ಯತೆ ಬಿತ್ತು. ಸ್ವತಃ 31 ವರ್ಷದ ಮಗನೇ ತನ್ನ ಯಕೃತ್ ನ ಭಾಗವನ್ನು ದಾನ ಮಾಡಲು ಮುಂದಾದರು. ಸಕಾಲದಲ್ಲಿ ಯಕೃತ್ ಸಿಕ್ಕ ಪರಿಣಾಮ ಅವರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು ಎಂದು ವಿವರಿಸಿದರು.
ದಾನಿಯ ಯಕೃತ್ತಿನ ಉಳಿದ ಭಾಗವು ತಕ್ಷಣವೇ ಪುನರುತ್ಪಾದಿಸಲು ಪ್ರಾರಂಭಿಸುತ್ತದೆ. ಆರರಿಂದ ಎಂಟು ವಾರಗಳಲ್ಲಿ ಅದರ ಸಾಮಾನ್ಯ ಗಾತ್ರಕ್ಕೆ ಯಕೃತ್ ಬೆಳೆಯುತ್ತದೆ. ಹೆಚ್ಚಿನ ಯಕೃತ್ ದಾನಿಗಳು ಶಸ್ತ್ರಚಿಕಿತ್ಸೆಯ ಒಂದು ವಾರದ ನಂತರ ಸಾಮಾನ್ಯ ಜೀವನಕ್ಕೆ ಮರಳಬಹುದು ಎಂದರು.
ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ನಿರ್ದೇಶಕ ಡಾ.ಬಿ.ಎಸ್.ರವೀಂದ್ರ ಮಾತನಾಡಿ, ಯಕೃತ್ತಿನ ಕ್ಯಾನ್ಸರ್ ಅನ್ನು CT ಸ್ಕ್ಯಾನ್ ಸ್ಕ್ರೀನಿಂಗ್ ನಲ್ಲಿ ಪತ್ತೆ ಹಚ್ಚಲಾಯಿತು. ಕೊಲಾಂಜೈಟಿಸ್ ನೊಂದಿಗೆ ಸಿರೋಟಿಕ್ ರೋಗಿಗೆ ಚಿಕಿತ್ಸೆ ನೀಡುವುದು ಸವಾಲಿನ ಸಂಗತಿ, ಜೊತೆಗೆ ಸಾಮಾನ್ಯ ಪಿತ್ತರಸ ನಾಳದಿಂದ ಕಲ್ಲುಗಳನ್ನು ಯಶಸ್ವಿಯಾಗಿ ಹೊರತೆಗೆದು ಸ್ಟೆಂಟ್ ಗಳನ್ನು ಇರಿಸಲು ಸಾಧ್ಯವಾಯಿತು ಎಂದು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA