ತಿಪಟೂರು: ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿ ತಿಪಟೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಶಾಸಕ ಕೆ.ಷಡಕ್ಷರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತಿಪಟೂರು ಗ್ರಾಮದೇವತೆ ಶ್ರೀಕೆಂಪಮ್ಮ ದೇವಿ ದೇವಾಲಯದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಕೋಡಿಸರ್ಕಲ್, ದೊಡ್ಡಪೇಟೆ, ಬಿ.ಹೆಚ್.ರಸ್ತೆ ಮೂಲಕ ನಗರಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರಸಲ್ಲಿಸಲಾಯಿತು. ತಿಪಟೂರು ತಹಶೀಲ್ದಾರ್ ಪವನ್ ಕುಮಾರ್ ಮನವಿ ಪತ್ರ ಸ್ವೀಕರಿಸಿದರು.
ಪ್ರತಿಭಟನಾ ನಿರತರನ್ನುದ್ದೇಶಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಪ್ರಾಮಾಣಿಕವಾಗಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನ ವಿರುದ್ಧ ರಾಜ್ಯಪಾಲ ನೀಡಿರುವ ಪ್ರಾಸಿಕ್ಯೂಷನ್ ದೋಷಪೂರಿತವಾಗಿದೆ. ಸಂವಿಧಾನಬದ್ಧವಾಗಿ ಆಡಳಿತ ನಡೆಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಮೇಲೆ ಒತ್ತಡ ಹೇರಿ, ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಮಾಡಿದ್ದಾರೆ ಎಂದರು.
ಸಿದ್ದರಾಮಯ್ಯನವರಿಗೆ ತೊಂದರೆಯಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ, ನಮ್ಮ ಸರ್ಕಾರ 136 ಜನ ಚುನಾಯಿತ ಶಾಸಕರೊಂದಿಗೆ ಆಡಳಿತ ನಡೆಸುತ್ತಿದ್ದು, ಸರ್ಕಾರವನ್ನ ಅಸ್ಥಿರಗೊಳಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ನಾವು ಪ್ರಾಣ ಕೊಟ್ಟಾದರೂ ಸರ್ಕಾರದ ರಕ್ಷಣೆಗೆ ಹೋರಾಡುತ್ತೇವೆ, ಭ್ರಷ್ಟ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರ ಕುತಂತ್ರವನ್ನು ರಾಜ್ಯದ ಮುಂದೆ ಬಯಲುಗೊಳಿಸುತ್ತೇವೆ. ವಾಮಾಮಾರ್ಗದ ಮೂಲಕ ಅಧಿಕಾರ ಹಿಡಿಯಬಹುದು ಎನ್ನುವ ಕೇಂದ್ರದ ಬಿಜೆಪಿ ನಾಯಕರ ಯೋಜನೆ ಕೈಗೂಡಲು ಬಿಡುವುದಿಲ್ಲ. ಇಂಡಿಯಾ ನಾಯಕರು ಎಲ್ಲರೂ ಸಿದ್ದರಾಮಯ್ಯನವರ ಪರವಾಗಿ ಬೆಂಬಲಕ್ಕೆ ನಿಂತಿದ್ದು ರಾಜ್ಯದ ನಾಯಕರೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ, ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಆದ್ದರಿಂದ ಅವರಿಗೆ ತೊಂದರೆಯಾಗಲು ಬಿಡುವುದಿಲ್ಲ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುವುದನ್ನು ಬಿಟ್ಟು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಾಡೇನೂರು ಕಾಂತರಾಜು ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯಪಾಲರನ್ನ ದುರ್ಬಳಕೆ ಮಾಡಿಕೊಂಡು ಸಂವಿಧಾನ ಬದ್ಧವಾದ ಸರ್ಕಾರವನ್ನ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ಪ್ರಾಮಾಣಿಕವಾಗಿ ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರ ಮೇಲೆ ಮೂಡ ಪ್ರಕರಣದಲ್ಲಿ ಕಾನೂನು ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ನಗರಾಧ್ಯಕ್ಷ ಟಿ.ಎನ್.ಪ್ರಕಾಶ್, ಎಸ್ ಸಿ ಘಟಕದ ಅಧ್ಯಕ್ಷರಾದ ಬಜಗೂರು ಮಂಜುನಾಥ್, ಮಾಜಿ ಜಿ.ಪಂ. ಸದಸ್ಯ ಕೊಪ್ಪ ಶಾಂತಪ್ಪ, ಮುಖಂಡರಾದ ನ್ಯಾಕೇನಹಳ್ಳಿ ಸುರೇಶ್, ಮಹಮ್ಮದ್ ದಸ್ತಗಿರ್, ಷಫಿಉಲ್ಲಾ ಶರೀಫ್, ಕುರುಬರ ಸಂಘದ ಅಧ್ಯಕ್ಷ ಚಂದ್ರೇಗೌಡ, ವಿರುಪಾಕ್ಷಯ್ಯ ಹೊನ್ನೆನಹಳ್ಳಿ ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q