ತುಮಕೂರು: ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ಯುವಜನತೆ ತಮ್ಮ ಕ್ರಿಯಾಶೀಲತೆ, ನೈಪುಣ್ಯತೆಯನ್ನು ಮತ್ತು ಸಂವಹನ ಕಲೆಯನ್ನು ದೂರದೃಷ್ಟಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಸ್ ಸಂಸ್ಥೆಯ ಅಖಿಲ ಭಾರತ ಮಟ್ಟದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್ಆರ್ ವಿಭಾಗ) ವಿಭಾಗದ ಮುಖ್ಯಸ್ಥೆ ಸಾಕಿನ ಬಕ್ಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಹೇ ಮತ್ತು ಬಾಸ್ ಸಂಸ್ಥೆಯ ಸಹಯೋಗಲದಲ್ಲಿ ಏರ್ಪಡಿಸಲಾಗಿದ್ದ ‘ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಉದ್ಯೋಗ ಮೇಳದಂತಹ ಸಮಾಜಮುಖಿ ಕಾರ್ಯಕ್ರಮಗಳು ಅತ್ಯಂತ ಪ್ರಶಂಸನೀಯವಾಗಿವೆ. ಇವತ್ತಿನ ಯುವಜನತೆ ತಮ್ಮ ಕ್ರಿಯಾಶೀಲತೆ ಮತ್ತು ಸಂವಹನ ಕಲೆಯನ್ನು ಅತ್ಯಂತ ದೂರದೃಷ್ಟಿಯನ್ನು ಇಟ್ಟುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಮಾತನಾಡಿ, ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಸಾಕಷ್ಟಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಹೇಳಿದರು.
ಸಾಹೇ ಕುಲಸಚಿವರಾದ ಡಾ.ಅಶೋಕ್ ಮೆಹ್ತಾ ಅವರು ಮಾತನಾಡಿ, ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಾವು ಹೊಂದಾಣಿಕೆಯನ್ನು ಮಾಡಿಕೊಂಡಾಗ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಉಳಿದುಕೊಳ್ಳಬಹುದು. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಇದೆ ಆದರೆ ಈ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಉಳ್ಳವರು ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಉದ್ಯೋಗಕ್ಕೆ ತಕ್ಕ ಕೌಶಲ್ಯವನ್ನು ರೂಪಿಸಿಕೊಂಡು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.
ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂಎಸ್ ರವಿಪ್ರಕಾಶ್ ಮಾತನಾಡಿ ನಾವು ಮಾಡುವ ಕೆಲಸದ ಮೇಲೆ ಅಭಿಮಾನ ಇರಿಸಿಕೊಂಡು ಕ್ಷುಲ್ಲಕ ಕಾರಣಗಳಿಗೆ ಸಿಕ್ಕ ಉದ್ಯೋಗವನ್ನು ಬಿಟ್ಟು ಬೇರೊಂದು ಉದ್ಯೋಗಕ್ಕೆ ಹೋಗದೆ ಇರುವ ಉದ್ಯೋಗದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಮುಂದುವರಿಯಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್, ಉದ್ಯೋಗ ಮೇಳದ ಆಯೋಜಕರಾದ ಡಾ.ಶ್ರೀನಿಧಿ ಮತ್ತು ಉದ್ಯೋಗಾಧಿಕಾರಿಗಳಾದ ಡಾ.ಕಲೀಮ್, ಡಾ.ಹರೀಶ್ ಮುಂತಾದವರು ಭಾಗವಹಿಸಿದ್ದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 1,500 ಉದ್ಯೋಗಾಂಕ್ಷಿಗಳು ಮತ್ತು ವಿವಿಧ ಕಂಪನಿಯ 66 ಉದ್ಯೋಗಪತಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.
ಸುಮಾರು 160 ಉದ್ಯೋಗಾಂಕ್ಷಿಗಳಿಗೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡಲಿಕ್ಕೆ ಅಂತಿಮಗೊಳಿಸಿ, ಆಯ್ಕೆ ಪಟ್ಟಿ ಪ್ರಕಟಿಸಲಾಯಿತು. ಪ್ರಮುಖವಾಗಿ ವಿಶೇಷ ಚೇತನರಿಗೆ ಸಾಧ್ಯವಾಗುವಂತಹ ಉದ್ಯೋಗಗಳನ್ನು ಕೊಡಲು ಕೆಲವು ಸಂಸ್ಥೆಗಳು ಮುಂದೆ ಬಂದು ಹಲವಾರು ವಿಕಲಚೇತನರು ಸಹ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳುವಂತಹ ಉದ್ಯೋಗಗಳನ್ನು ಪಡೆದುಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4