ಉಜಿರೆ: ಉತ್ತಮ ಆಹಾರ ಶೈಲಿ, ಪರಿಪೂರ್ಣ ಜೀವನ ಕ್ರಮ ಹಾಗೂ ಕಾಲ ಕಾಲಕ್ಕೆ ಸರಿಯಾಗಿ ಸೂಕ್ತ ವೈದ್ಯರಿಂದ ತಪಾಸಣೆ ನಡೆಸಿದಾಗ ಕ್ಯಾನ್ಸರ್ ರೋಗವನ್ನು ಸಂಪೂರ್ಣವಾಗಿ ನಿವಾರಿಸಬಹುದು ಎಂದು ಎಸ್.ಡಿ.ಎಮ್. ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಶಂಕರ್ ನುಡಿದರು.
ಡಿ.ಕೆ.ಆರ್. ಡಿ.ಎಸ್. (ರಿ) ಬೆಳ್ತಂಗಡಿ ನೇತೃತ್ವದಲ್ಲಿ, ಕಾರಿತಾಸ್ ಇಂಡಿಯಾ ನವದೆಹಲಿ-ಸ್ಪರ್ಶ ಕಾರ್ಯಕ್ರಮ, ಗ್ರಾಮ ಪಂಚಾಯತ್ ಉಜಿರೆ, ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ- ಎಸ್.ಡಿ.ಎಮ್. ಕಾಲೇಜು ಉಜಿರೆ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಹಾಗೂ ಸಮಾಜ ಕಾರ್ಯ ವಿಭಾಗ- ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇವುಗಳ ಆಶ್ರಯದಲ್ಲಿ ಉಜಿರೆ ಪೇಟೆಯಲ್ಲಿ ನಡೆದ ‘ವಿಶ್ವ ಕ್ಯಾನ್ಸರ್ ದಿನಾಚರಣಾ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಾವ್ಯ ವೈಪನಾ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು. ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ನಿರ್ದೇಶಕರಾಗಿರುವ ವಂ. ಫಾ. ಬಿನೋಯಿ. ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಸ್ಪರ್ಶ- ಕ್ಯಾನ್ಸರ್ ರೋಗದ ವಿರುದ್ಧ ನಡೆಸುವ ಅಭಿಯಾನದ ಬಗ್ಗೆ ವಿವರಿಸಿದರು. ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಆರ್. ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಡಿ.ಕೆ.ಆರ್.ಡಿ.ಎಸ್. ಸಂಸ್ಥೆಯ ಸ್ಪರ್ಶ ಕಾರ್ಯಕ್ರಮದ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ ಇದರ ಕಾರ್ಯದರ್ಶಿ ಶ್ರೀಮತಿ ಮಂಜುಳಾ ಜೋನ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಧನ್ಯವಾದವಿತ್ತರು.
ಸುಮಾರು 85 ಮಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿಸೋಜಾರವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಉಜಿರೆ ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ, ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಲಾಯಿತು.
ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ‘ಹತ್ತು ರೂಪಾಯಿ ಅಭಿಯಾನ’ ಎಂಬ ಕಾರ್ಯಕ್ರಮದ ಮೂಲಕ ಧನ ಸಹಾಯ ಸಂಗ್ರಹಣೆ ಮಾಡಲಾಯಿತು. ಸಂಗ್ರಹಿಸಿದ ಧನವನ್ನು ಅರ್ಹ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ವಿತರಿಸಲಾಗುವುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB