ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ.
ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ.
ವಿಚಾರಣೆ ವೇಳೆ, ಅಡ್ವೊಕೇಟ್ ಜನರಲ್ ಶೆಟ್ಟಿ, ‘ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ ಸಲ್ಲಿಸಿಲ್ಲ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಅದು ವರದಿ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ವಾದಿಸಿದರು.
ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯೂ ಇಂದೇ ನಡೆಯಲಿದ್ದು, ಸೂಕ್ಷ್ಮ ಮಾಹಿತಿಯನ್ನು ಅರ್ಜಿದಾರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಮುಚ್ಚಿದ ಲಕೋಟೆಯಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಅನುಮತಿ ಕೇಳಿದರು.
ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ಮಂಗಳವಾರ ವಿಚಾರಣೆ ನಡೆಸಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW