ಬೀದರ್ : ಔರಾದ್ ಪಟ್ಟಣದ ಬಾಲಕಿಯರ ವಸತಿ ನಿಲಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯ ಹಿನ್ನೆಲೆ ಜಿಲ್ಲೆಯ ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸುವ ದಿಸೆಯಲ್ಲಿ ಅವರೊಂದಿಗೆ ಮನೋವೈದ್ಯರ ಮೂಲಕ ಪ್ರತಿ ವಾರ ಸಮಾಲೋಚನೆ ನಡೆಸಲು ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಅಧಿಕಾರಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಮತ್ತು ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ್ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ ಅಗತ್ಯ ಸಲಹೆಗಳು ನೀಡಿದ್ದಾರೆ.
ಜಿಲ್ಲೆಯ ಸಿಎಚ್ ಸಿ ಮತ್ತು ಪಿಎಚ್ ಸಿ ಕೇಂದ್ರಗಳಲ್ಲಿನ ವೈದ್ಯಾಧಿಕಾರಿಗಳು ಪ್ರತಿ ವಾರಕ್ಕೊಮ್ಮೆ ತಮ್ಮ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಬೇಕು. ಅವರ ಚಲನವಲನಗಳಲ್ಲಿ ವ್ಯತ್ಯಾಸ, ಖಿನ್ನತೆಯಂತಹ ವಿಷಯಗಳು ಕಂಡುಬಂದಲ್ಲಿ ವೈದ್ಯರು ಹಾಗೂ ನಿಲಯ ಪಾಲಕರು ತಮ್ಮ ಇಲಾಖೆಯ ಮುಖ್ಯಸ್ಥರಿಗೆ ಮಾಹಿತಿ ನೀಡಬೇಕು. ಈ ಮೂಲಕ ಮಕ್ಕಳ ಆರೋಗ್ಯದ ಸ್ಥಿರತೆ ಕಾಪಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಅವರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ನಿಲಯಗಳು ಮತ್ತು ನಿಲಯ ಪಾಲಕರ ಮಾಹಿತಿಯನ್ನು ಅಧಿಕಾರಿಗಳು ಒಂದೆರಡು ದಿನದಲ್ಲಿ ನೀಡಬೇಕು. ಹಾಸ್ಟೆಲ್ ಗಳಿಗೆ ಆಯಾ ವ್ಯಾಪ್ತಿಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮನೋವೈದ್ಯರಾದ ಡಾ.ಅಮಲ್ ಮತ್ತು ಡಾ.ರಾಘವೇಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


