ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ.
ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್ಹೌಸ್ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.ಕಣವಿ ನಡೆದು ಬಂದ ದಾರಿ:
ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಶಿರುಂಡ, ಗರಗಗಳಲ್ಲಿ 1940-46ರಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು.
1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್(1996-98), ಪಂಪ ಪ್ರಶಸ್ತಿ(1999), ಅನಕೃ ಪ್ರತಿಷ್ಠಾನ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.
1996ರಲ್ಲಿ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾಸನದಲ್ಲಿ ಜರುಗಿದಾಗ ಕಣವಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು. ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.
ಧಾರವಾಡದ ಕಲ್ಯಾಣ ನಗರದ ಚೆಂಬೆಳಕು ನಿವಾಸದಲ್ಲಿ ಕಣವಿ ಅವರು ನಿವೃತ್ತಜೀವನ ನಡೆಸುತಿದ್ದ ಅವರು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದರು.ಸಂತಾಪ: ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ಮುರುಗೇಶ್ ನಿರಾಣಿ, ಮಾಜಿ ಸಚಿವ ವಿನಯ್ಕುಮಾರ್ ಕುಲಕರ್ಣಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB