ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ಹಮ್ಮಿಕೊಂಡಿರುವ ಪ್ರತಿಭಟನೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
ನಿನ್ನೆ (ಡಿ.23) ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುವ ಮೂಲಕ ಮೆರವಣಿಗೆ ನಡೆಸಿದ್ದ ಪ್ರತಿಭಟನಾಕಾರರು, ಇಂದು ಕೂಡ ಪಂಚಾಯಿತಿ ಕಚೇರಿ ಮುಂದೆ ಧರಣಿ ಮುಂದುವರಿಸಿದ್ದಾರೆ. ಪಿಡಿಒ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದ್ದು, ಮುಖ್ಯವಾಗಿ ಆರ್.ಟಿ.ಐ ಅರ್ಜಿಗಳಿಗೆ ಮಾಹಿತಿ ನೀಡದಿರುವುದು, ಐಮಾಸ್ (i-MAAS) ದಂಧೆ, ಪಂಚಾಯಿತಿ ಹಣ ದುರ್ಬಳಕೆ ಹಾಗೂ ಇ-ಸ್ವತ್ತು ಮಾಡಿಕೊಡಲು ರೂ. 10 ರಿಂದ 20 ಸಾವಿರ ಲಂಚಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ವಾರ್ಡ್ ಸಭೆಗಳನ್ನು ನಡೆಸದಿರುವುದು, ದಲಿತರ ಬೀದಿಗಳ ಸ್ವಚ್ಛತೆ ಮಾಡದೆ ಬಿಲ್ ಪಾವತಿಸಿಕೊಳ್ಳುವುದು ಹಾಗೂ ಸಾರ್ವಜನಿಕರೊಂದಿಗೆ ದುರ್ವರ್ತನೆ ತೋರುತ್ತಿರುವ ಬಗ್ಗೆಯೂ ದೂರು ಕೇಳಿಬಂದಿದೆ. ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಇಒ (EO) ಆಗಮಿಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರೂ, ಪ್ರತಿಭಟನಾಕಾರರು ಸಮಾಧಾನಗೊಂಡಿಲ್ಲ. ಜಿಲ್ಲಾ ಪಂಚಾಯಿತಿ ಸಿಇಒ (CEO) ಅವರೇ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿರುವ ದಲಿತ ಸಂಘಟನೆಗಳ ಒಕ್ಕೂಟ, ಅಲ್ಲಿಯವರೆಗೂ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


