ಬೆಂಗಳೂರು: ಹಿರಿಯ ಪತ್ರಕರ್ತ ಹಾಗು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93)ಅವರು ಇಂದು ನಿಧನರಾಗಿದ್ದಾರೆ .
ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ.ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಅಸುನೀಗಿದರು ಎಂದು ಅವರ ಪುತ್ರ ಡಾ.ಬಾಲಜಿ ತಿಳಿಸಿದ್ದಾರೆ .
1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ ಅವರು ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
“ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕಗಳ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ , ಕೆಯುಡಬ್ಲ್ಯೂಜೆ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು.
ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.
ಸಾರ್ವಜನಿಕ ದರ್ಶನಕ್ಕಾಗಿ ಪಾರ್ತೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದಲ್ಲಿ ವಾಸವಾಗಿದ್ದ ಮನೆ 295/12/17 ನೇ ಮೇನ್ 16 ನೇ ಕ್ರಾಸ್ ಇಡಲಾಗುವುದು ಎಂದು ಡಾ.ಬಾಲಾಜಿ ತಿಳಿಸಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸಂತಾಪ ವ್ಯಕ್ತಪಡಿಸಿದೆ.
ತೊಂಬತ್ತನೇ ವಸಂತ ತುಂಬಿದ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ವತಿಯಿಂದ ರಾಮಯ್ಯ ಅವರನ್ನ ಅವರ ಮನೆಯಂಗಳದಲ್ಲಿಯೇ ದಂಪತಿಗಳ ಸಹಿತ ಗೌರವಿಸಲಾಗಿತ್ತು. ಕಳೆದ ಜನ್ಮ ದಿನದ ಸಂದರ್ಭದಲ್ಲೂ ಅವರ ಮನೆಯಲ್ಲಿಯೇ ಭೇಟಿ ಮಾಡಿ ಶುಭಾಶಯ ಕೋರಲಾಗಿತ್ತು ಎಂದು ನೆನಪಿಸಿಕೊಂಡಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಶೋಕಿಸಿದ್ದಾರೆ. ರಾಮಯ್ಯ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲೆಂದು ತಗಡೂರು ಪ್ರಾರ್ಥಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


