ಹಾವೇರಿ: ರಾಜ್ಯ ಕಾಂಗ್ರೆಸ್ ಸರ್ಕಾರ 1,000 ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಆಯೋಜಿಸಿರುವ ‘ಸಾಧನಾ ಸಮಾವೇಶ’ದ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನು “ಶೂನ್ಯ ಸಾಧನೆಯ ಹಾಗೂ ಭ್ರಷ್ಟಾಚಾರದ ಸಮಾವೇಶ” ಎಂದು ಅವರು ಟೀಕಿಸಿದ್ದಾರೆ.
ಶನಿವಾರ ಹಾವೇರಿಯಲ್ಲಿ ನಡೆದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1,000 ದಿನಗಳ ಆಡಳಿತದಲ್ಲಿ ಸರ್ಕಾರ ಯಾವುದೇ ಗಣನೀಯ ಸಾಧನೆ ಮಾಡಿಲ್ಲ. ಇದೊಂದು ವ್ಯರ್ಥ ಆಡಳಿತದ ಪ್ರದರ್ಶನ ಎಂದು ಅವರು ಕಿಡಿಕಾರಿದ್ದಾರೆ.
ಗ್ರಾಮೀಣ ಭಾಗದ ಜನರಿಗೆ ಹಕ್ಕು ಪತ್ರ ನೀಡುವ ನೆಪದಲ್ಲಿ ನೋಂದಣಿ ಶುಲ್ಕದ ಹೆಸರಿನಲ್ಲಿ ಬಡವರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಖಜಾನೆ ತುಂಬಿಸಿಕೊಳ್ಳಲು ಸರ್ಕಾರ ಬಡವರ ತಲೆ ಮೇಲೆ 3-4 ಲಕ್ಷ ರೂ.ಗಳ ಹೊರೆ ಹಾಕುತ್ತಿದೆ ಎಂದು ದೂರಿದ್ದಾರೆ.
ಕಂದಾಯ ಇಲಾಖೆಯಲ್ಲಿ ಹಕ್ಕು ಪತ್ರ ನೀಡುವ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಇದು ಸಾಧನೆಯ ಸಮಾವೇಶವಲ್ಲ, ಬದಲಿಗೆ ಭ್ರಷ್ಟಾಚಾರದ ಸಮಾವೇಶ ಎಂದು ವ್ಯಂಗ್ಯವಾಡಿದ್ದಾರೆ.
ವಸತಿ ಯೋಜನೆಗಳ ಕುಂಠಿತ: ಪ್ರಧಾನಮಂತ್ರಿ ಆವಾಸ ಯೋಜನೆಯಡಿ ರಾಜ್ಯದಲ್ಲಿ ಮನೆಗಳ ನಿರ್ಮಾಣ ಪ್ರಕ್ರಿಯೆ ಸಂಪೂರ್ಣ ಸ್ಥಗಿತಗೊಂಡಿದೆ. ಬಡವರು ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಸಮಾವೇಶಕ್ಕೆ ಜನರನ್ನು ಸೇರಿಸಲು ಸರ್ಕಾರಿ ಸೌಲಭ್ಯಗಳ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಅತ್ಯಂತ ಖಂಡನೀಯ ಎಂದು ಕರೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


