ತುಮಕೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವ ಕ್ರಮ ಸರಿಯಲ್ಲ, ಇಲ್ಲಿಯವರೆಗೆ ನೀರು ಸಂಗ್ರಹಕ್ಕೆ ನಗರಾಡಳಿತ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿ ಬೇಸಿಗೆ ಬಂದ ಕೂಡಲೇ ಟ್ಯಾಂಕರ್ ಸರಬರಾಜು ಎಂಬ ಉತ್ತರ ಬರುವುದು ಸಮಾಧಾನಕರವಲ್ಲ. ಇದಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮದ ವ್ಯವಸ್ಥೆ ಮಾಡಿಕೊಳ್ಳದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಾತ್ರೆಗೆ ಅನುಮತಿ ಕಡ್ಡಾಯ:
ಬೇಸಿಗೆ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಜಾತ್ರೆಗಳು ಆಗುತ್ತವೆ. ಈ ಸಂದರ್ಭದಲ್ಲಿ ಜನರ ಕ್ಷೇಮ ಕಾಳಜಿಗೆ ಯಾವ ಕ್ರಮ ಅನುಸರಿಸಿದ್ದೀರಿ ಎಂದು ಉಪ ವಿಭಾಗಾಧಿಕಾರಿಗಳನ್ನು ಪ್ರಶ್ನಿಸಿದ ಅವರು, ಯಾವುದೇ ಜಾತ್ರೆ ಹಬ್ಬ ಆಚರಿಸಲು ಸ್ಥಳೀಯ ಆಡಳಿತದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಒಂದೊಮ್ಮೆ ಅನುಮತಿ ಇಲ್ಲದೆ ನಡೆದ ಜಾತ್ರೆ ಹಬ್ಬಗಳ ಸಂಬಂಧ ಆಗುವ ಸಮಸ್ಯೆಗಳಿಗೆ ಆಯಾ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ನಗರ ಪ್ರದೇಶಗಳಿಗೆ ದಿನವೂ ಕುಡಿಯುವ ನೀರು ಸರಬರಾಜಾಗಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಳೆದ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ, ಹೇಮಾವತಿ ನೀರಿನ ಸರಬರಾಜಿನಿಂದಲೂ ಕೆರೆಗಳಲ್ಲಿ ನೀರು ಇದೆ. ಆದರೂ ಜೂನ್ ತಿಂಗಳ ನಂತರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಲ್ಲಿಯವರೆಗೆ ಜಿಲ್ಲೆಯ ಕೆಲವು ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಬೇಸಿಗೆಯಲ್ಲಿ ಯಾವುದೇ ಸಮಸ್ಯೆ ತಲೆದೂರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರಲ್ಲದೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕುರಿತಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳನ್ನೇ ಹೊಣೆ ಮಾಡಬೇಕಾಗುತ್ತದೆ:
ಅಧಿಕಾರಿಗಳ ನಿಧಾನ ಧೋರಣೆಯಿಂದ ನೀರು ಸಂಗ್ರಹಣೆ ಸಂಬಂಧಿತ ಕಾಮಗಾರಿಗಳು ವಿಳಂಬವಾಗಿವೆ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಸಾರ್ವಜನಿಕರಿಂದ ಸಮಸ್ಯೆ ಕೂಗು ಕೇಳಿಬಂದರೇ ತಮ್ಮನ್ನೇ ಹೊಣೆ ಮಾಡುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಮೇಲಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು ಹಾಗೂ ವಿಳಂಬ ನೀತಿಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಸೇರಿದಂತೆ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


