ಫರೂಕಾಬಾದ್ (ಉತ್ತರ ಪ್ರದೇಶ): ಅಡುಗೆ ಅನಿಲ (LPG) ಸಿಲಿಂಡರ್ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ 75 ವರ್ಷದ ವೃದ್ಧರೊಬ್ಬರು ತಲೆತಿರುಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಮೊಹಲ್ಲಾ ಮಣಿಹರಿಯ ನಿವಾಸಿ ಮುಖ್ತಾರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರ ಬೆಳಗ್ಗೆ ಲಾಲ್ ಸರಾಯ್ನಲ್ಲಿರುವ ಗ್ಯಾಸ್ ಏಜೆನ್ಸಿಯ ಗೋದಾಮಿನ ಮುಂದೆ ಸಿಲಿಂಡರ್ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಏಕಾಏಕಿ ತಲೆತಿರುಗಿ ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು. ಮುಖ್ತಾರ್ ಅನ್ಸಾರಿ ಅವರು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಿಲಿಂಡರ್ಗಾಗಿ ಸಾಲಿನಲ್ಲಿ ನಿಂತು ವೃದ್ಧರೊಬ್ಬರು ಸಾವನ್ನಪ್ಪಿರುವುದು ಅತ್ಯಂತ ದುರದೃಷ್ಟಕರ. ಬಿಜೆಪಿ ನಾಯಕರು ತಮ್ಮ ಸರ್ಕಾರದ ತಪ್ಪುಗಳಿಂದ ಜನರ ಜೀವ ಹೋಗುತ್ತಿರುವುದನ್ನು ಒಪ್ಪಿಕೊಳ್ಳಬೇಕು” ಎಂದು ಅವರು ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಜಿಲ್ಲಾ ಗ್ಯಾಸ್ ಸರಬರಾಜು ಅಧಿಕಾರಿ ಸುರೇಂದ್ರ ಯಾದವ್ ಅವರು ಪ್ರತಿಕ್ರಿಯಿಸಿ, “ಜಿಲ್ಲೆಯಲ್ಲಿ ಗ್ಯಾಸ್ ಕೊರತೆಯಿಲ್ಲ, ಪೂರೈಕೆ ಸ್ಥಿರವಾಗಿದೆ. ಆ ಏಜೆನ್ಸಿಯಲ್ಲಿ ಹೆಚ್ಚಿನ ಪ್ರಮಾಣದ ಬುಕಿಂಗ್ ಇರುವುದರಿಂದ ವಿತರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯರು ಸಿಲಿಂಡರ್ ಪಡೆಯಲು ತೀವ್ರ ತೊಂದರೆ ಅನುಭವಿಸುತ್ತಿರುವುದಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


