ನವದೆಹಲಿ: ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, “ಅವರಿಬ್ಬರಿಗೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ವಿಶಾಲ ಹೃದಯವಿರಲಿಲ್ಲ” ಎಂದು ಟೀಕಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ದೇವೇಗೌಡರನ್ನು ಪ್ರಧಾನಿಯನ್ನಾಗಿ ಮತ್ತು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ನಮ್ಮ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಆದರೆ, ತಮಗೆ ಸಿಕ್ಕ ಅಧಿಕಾರ ಮತ್ತು ಸ್ಥಾನಮಾನಗಳನ್ನು ನಿಭಾಯಿಸುವ ಸಾಮರ್ಥ್ಯ ಹಾಗೂ ಧೈರ್ಯ ಅವರಿಬ್ಬರಲ್ಲೂ ಇರಲಿಲ್ಲ ಎಂದು ಕಿಡಿಕಾರಿದರು.
“ಮೈತ್ರಿ ಸರ್ಕಾರವನ್ನು ತಾಳ್ಮೆ ಮತ್ತು ಸಂತೋಷದಿಂದ ಮುನ್ನಡೆಸುವುದು ಅವರ ಜವಾಬ್ದಾರಿಯಾಗಿತ್ತು. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗದ ಕಾರಣಕ್ಕಾಗಿಯೇ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು” ಎಂದು ಶಿವಕುಮಾರ್ ವಿಶ್ಲೇಷಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಎರಡು–ಮೂರು ದಿನಗಳಲ್ಲಿ ಹೈಕಮಾಂಡ್ ಅಂತಿಮ ತೀರ್ಮಾನ ಪ್ರಕಟಿಸಲಿದೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಸಂಸದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ವರದಿ ಸಿದ್ಧಪಡಿಸಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


