ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಗರದ ಮುಖ್ಯ ರಸ್ತೆ ಹಾಗೂ ಉಪ ಮುಖ್ಯ ರಸ್ತೆಗಳಲ್ಲಿ ಇನ್ಮುಂದೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಜಿಬಿಎ (Greater Bengaluru Authority) ಕಾರ್ಯಕಾರಿ ಸಮಿತಿ ಮತ್ತು ಶಾಸಕರ ಸಭೆಯ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಪಾದಚಾರಿಗಳ ಹಿತದೃಷ್ಟಿಯಿಂದ ಹೊಸ ನೀತಿಯನ್ನು ಜಾರಿಗೆ ತರಲಾಗುತ್ತಿದ್ದು, ಫುಟ್ ಪಾತ್ಗಳನ್ನು ಅತಿಕ್ರಮಿಸಿಕೊಂಡಿರುವ ವ್ಯಾಪಾರಿಗಳನ್ನು ತೆರವುಗೊಳಿಸಿ ಅವರಿಗೆ ಪ್ರತ್ಯೇಕ ಜಾಗ ನಿಗದಿಪಡಿಸಲಾಗುವುದು.
ನಗರದಲ್ಲಿ ಸುಮಾರು 60 ಸಾವಿರ ಬೀದಿ ವ್ಯಾಪಾರಿಗಳು ನೋಂದಾಯಿಸಿಕೊಂಡಿದ್ದಾರೆ. ಕೇವಲ ಅಧಿಕೃತ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ನಿಗದಿಪಡಿಸಿದ ಜಾಗಗಳಲ್ಲಿ ವ್ಯಾಪಾರ ಮಾಡಲು ಅವಕಾಶವಿರುತ್ತದೆ.
ಹಗಲು ವ್ಯಾಪಾರ ಮುಗಿಸಿ ರಾತ್ರಿ ವೇಳೆ ರಸ್ತೆ ಬದಿಯಲ್ಲೇ ಗಾಡಿಗಳನ್ನು ಬಿಟ್ಟು ಹೋದರೆ, ಅಂತಹ ಗಾಡಿಗಳನ್ನು ಬಿಬಿಎಂಪಿ ಅಧಿಕಾರಿಗಳು ವಶಪಡಿಸಿಕೊಳ್ಳಲಿದ್ದಾರೆ.
ನಗರದ ಸೌಂದರ್ಯ ಹಾಳುಮಾಡುವ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿ ಫ್ಲೆಕ್ಸ್ ಹಾಕುವವರಿಗೆ ಪ್ರತಿ ಫ್ಲೆಕ್ಸ್ಗೆ 50 ಸಾವಿರದಿಂದ 1 ಲಕ್ಷ ರೂಪಾಯಿವರೆಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ರಸ್ತೆ ಬದಿಗಳಲ್ಲಿ ವಾರಗಟ್ಟಲೆ ನಿಲ್ಲಿಸಲಾಗಿರುವ ಹಳೆಯ ಹಾಗೂ ಗುಜರಿ ವಾಹನಗಳನ್ನು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿ, ನಿಗದಿತ ಡಂಪಿಂಗ್ ಯಾರ್ಡ್ಗಳಿಗೆ ಸ್ಥಳಾಂತರಿಸಲಾಗುವುದು. ಪಾರ್ಕಿಂಗ್ ನಿಷೇಧಿತ ಪ್ರದೇಶಗಳಲ್ಲಿ ವಾಹನ ನಿಲ್ಲಿಸಿದರೆ ಅಂತಹ ವಾಹನಗಳನ್ನು ಟೋಯಿಂಗ್ ಮಾಡಲು ಪ್ರತಿ ಪಾಲಿಕೆಗೆ ತಲಾ 2 ವಾಹನಗಳನ್ನು ನೀಡಲಾಗಿದೆ.
ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಮತ್ತು ಪಾದಚಾರಿಗಳಿಗೆ ಸುಗಮ ದಾರಿ ಮಾಡಿಕೊಡಲು ಈ ಕಠಿಣ ಕ್ರಮಗಳು ಅನಿವಾರ್ಯ ಎಂದು ಡಿಸಿಎಂ ತಿಳಿಸಿದ್ದಾರೆ. ಈ ನಿರ್ಧಾರಕ್ಕೆ ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒಮ್ಮತದ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


