ತುಮಕೂರು: ಏಪ್ರಿಲ್ 1ರಂದು ಸಿದ್ದಗಂಗಯ ತ್ರಿವಿಧ ದಾಸೋಹಿ ಲಿಂಗೈಕ್ಯ ಕರ್ನಾಟಕ ರತ್ನ ಡಾ. ಶ್ರೀಶಿವಕುಮಾರಮಹಾಸ್ವಾಮೀಜಿ ಅವರ 119ನೇ ಜನ್ಮಜಯಂತೋತ್ಸವ ಹಿನ್ನೆಲೆಯಲ್ಲಿ ಶ್ರೀ ಮಠದಲ್ಲಿ ಗುರುವಂದನಾ ಮಹೋತ್ಸವ ನಡೆಯಲಿದೆ. ಈ ಬಾರಿಯ ಗುರುವಂದನಾ ಮಹೋತ್ಸವದ ವಿಶೇಷ ಅತಿಥಿಗಳಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಾಲ್ಗೊಳ್ಳುತ್ತಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮದ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ತುಮಕೂರು ಕ್ಷೇತ್ರದ ಸಂಸದರು, ಕೇಂದ್ರ ಸಚಿವರೂ ಆಗಿರುವ ವಿ.ಸೋಮಣ್ಣ ಭಾಗಿಯಾಗಿದ್ದರು. ಸಿದ್ದಗಂಗಾ ಮಠದಲ್ಲಿ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಭಕ್ತರ ಪಾಲಿಗೆ ನಡೆದಾಡುವ ದೇವರೆಂದೇ ಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ 119ನೇ ಜನ್ಮ ಜಯಂತಿ ಗುರುವಂದನಾ ಮಹೋತ್ಸವಕ್ಕೆ ದೇಶದ ಘನವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏ.1ರಂದು ಆಗಮಿಸುತ್ತಿರುವುದು ವಿಶೇಷವೆನಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಿಲ್ಲೆಗೆ ಅದರಲ್ಲೂ ತುಮಕೂರು ನಗರಕ್ಕೆ ಆಗಮಿಸುತ್ತಿರುವುದು ತುಮಕೂರಿನ ಅದೃಷ್ಟವೇ ಸರಿ ಎಂದರು.
ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲು ಭರದ ಸಿದ್ಧತೆಗಳು ನಡೆದಿದ್ದು, ಪೂರ್ವಭಾವಿ ಸಭೆಯಲ್ಲಿ ಮಠಕ್ಕೆ ರಾಷ್ಟ್ರಪತಿಗಳು, ರಾಜ್ಯಪಾಲರ ಭೇಟಿ, ಭದ್ರತಾ ವ್ಯವಸ್ಥೆ, ಗುರುವಂದನಾ ಮಹೋತ್ಸವ, ದಾಸೋಹ ವಿವರಣೆ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗಿದೆ. ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿ ಅವರು ಸೇರಿದಂತೆ ಅನೇಕರು ಉಪಯುಕ್ತ ಸಲಹೆಗಳನ್ನು ನೀಡಿದ್ದು, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು ಸೇರಿದಂತೆ ಎಲ್ಲಾ ಭಕ್ತರ ಸಹಕಾರದೊಂದಿಗೆ ಪೂಜ್ಯರ ಗುರುವಂದನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಕಲ್ಪಿಸಲಾಗಿದೆ ಎಂದರು.
ಶಾಸಕರಾದ ಬಿ.ಸುರೇಶ್ಗೌಡ, ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಎಸ್ಪಿ ಕೆ.ವಿ.ಅಶೋಕ್, ಜಿಪಂ ಸಿಇಒ ಜಿ.ಪ್ರಭು, ಎಡಿಸಿ ಶೈಲಜಾಪಿ, ತಹಶೀಲ್ದಾರ್ ರಾಜೇಶ್ವರಿ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಗಂಗಪ್ಪ, ಜಿಪಂ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ, ಸೇರಿದಂತೆ ಮಠದ ಆಡಳಿತ ಪ್ರಮುಖರಾದ ಟಿ.ಕೆ.ನಂಜುಂಡಪ್ಪ, ಜಯವಿಶ್ವಾಸ್ವಾಮಿ ಎಸ್.ವಿಶ್ವನಾಥಯ್ಯ, ಡಾ.ಶಿವಕುಮಾರ್ಯ್ಯ, ಉದ್ಯಮಿ ಸ್ಫೂರ್ತಿ ಚಿದಾನಂದ್, ಕೊಪ್ಪಳ ನಾಗರಾಜ್, ಕೋರಿ ಮಂಜುನಾಥ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡರು.
ಹಿಂದಿನ ದಿನವೇ ರಾಷ್ಟ್ರಪತಿಗಳ ಆಗಮನ: ಮಾ.31ರಂದು ರಾತ್ರಿ 8.30ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು ಲೋಕಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ಏ.1ರಂದು ಬೆಳಗ್ಗೆ 9.30ಕ್ಕೆ ತುಮಕೂರಿಗೆ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಮಠಕ್ಕೆ ಭೇಟಿ ನೀಡುವರು. ಮೊದಲಿಗೆ ಡಾ. ಶ್ರೀ ಶಿವಕುಮಾರಸ್ವಾಮೀಜಿ ಅವರ ಗದ್ದುಗೆ ದರ್ಶನ ಮಾಡಿ, ನಂತರ ಮಠದ ಹತ್ತುಸಾವಿರ ಮಕ್ಕಳ ಸಮೂಹವನ್ನು ಕೆಲ ನಿಮಿಷ ವೀಕ್ಷಿಸಿ ಗುರುವಂದನಾ ಸಮಾರಂಭದ ವೇದಿಕೆಗೆ ಆಗಮಿಸುವರು.
ಸಮಾರಂಭದಲ್ಲಿ ರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲರು, ಶ್ರೀ ಸಿದ್ದಲಿಂಗಸ್ವಾಮೀಜಿ, ಕಿರಿಯ ಶ್ರೀ ಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಹಿರಿಯ ಶಾಸಕರಾದ ಕೆ.ಎನ್.ರಾಜಣ್ಣ, ಟಿ.ಬಿ.ಜಯಚಂದ್ರ, ಬಿ.ಸುರೇಶ್ಗೌಡ ಉಪಸ್ಥಿತರಿರುವರು. ಸುಮಾರು ಒಂದೂವರೆ ತಾಸು ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗುವರು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


