ತುಮಕೂರು: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ಜನತಾ ದರ್ಶನ–ಜನಸ್ಪಂದನ ಕಾರ್ಯಕ್ರಮ ಯಶಸ್ವಿಗೊಳಿಸಿದ ಬೆನ್ನಲ್ಲೇ ಇಂದು ಬೆಳಗ್ಗೆ 11ಕ್ಕೆ ಜಿಲ್ಲಾಮಟ್ಟದ ಬೃಹತ್ ಜನತಾದರ್ಶನ/ಜನಸ್ಪಂದನ ಕಾರ್ಯಕ್ರಮವನ್ನು ನಗರ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಆಯೋಜಿಸಿದೆ.
ಸಾರ್ವಜನಿಕರ ಅಹವಾಲು ಸ್ವೀಕರಿಸುವ ಸಲುವಾಗಿ ಹತ್ತು ಕೌಂಟರ್ ಗಳನ್ನು ಗ್ರಂಥಾಲಯ ಸಭಾಂಗಣದ ಕಾರಿಡಾರ್ ನಲ್ಲಿ ತೆರೆದಿದ್ದು, ಈ ಕೌಂಟರ್ ಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದಲ್ಲದೆ, ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಕೌಂಟರ್ ಗಳಲ್ಲಿ ಇ–ಜಿಆರ್ ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗಿದ್ದು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಾರ್ಯಕ್ರಮ ರೂಪಿಸುವ ಸಂಬಂಧ ಆದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜಟಿಲ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದೆ. ತಾಲೂಕು ಮಟ್ಟದ ಜನತಾ ದರ್ಶನದಲ್ಲಿ ಸುಮಾರು 2500 ಅರ್ಜಿಗಳು ಬಂದಿದ್ದು, ಇದರಲ್ಲಿ ಶೇ.15 ರಿಂದ 20ರಷ್ಟು ಅರ್ಜಿಗಳನ್ನು ಇತ್ಯರ್ಥಗೊಳಿಸಿ ಫಲಾನುಭವಿಗಳಿಗೆ ಪರಿಹಾರ ಕಲ್ಪಿಸಿರುವ ಬಗ್ಗೆ ಇಂದಿನ ಜನತಾ ದರ್ಶನ ಸಭೆಯಲ್ಲಿ ಘೋಷಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಎಲ್ಲಾ ತಹಸೀಲ್ದಾರ್, ಇಟಿಜಿಗಳಿಗೆ ನಿರ್ದೇಶಿಸಿದ್ದಾರೆ ಎಂದು ಎಡಿಸಿ ಡಾ. ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಜನತಾದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಆಗಮಿಸುವ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕುಡಿಯುವ ನೀರು, ನೆರಳು, ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು. ಜನತಾ ದರ್ಶನದಲ್ಲಿ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಹಾಜರಿದ್ದು, ಎಲ್ಲಾ ಇಲಾಖೆಗಳ ಮುಖ್ಯಸ್ಥರು ಪರಸ್ಪರ ಸಹಕಾರದೊಂದಿಗೆ ಸಾರ್ವಜನಿಕರಿಂದ ಬಂದಂತಹ ಅಹವಾಲುಗಳಿಗೆ ತಾರ್ಕಿಕ ಅಂತ್ಯ ಸಿಗುವಂತೆ ಕೆಲಸ ನಿರ್ವಹಿಸಬೇಕು. ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸಬೇಕು.
— ಶುಭಕಲ್ಯಾಣ್, ಜಿಲ್ಲಾಧಿಕಾರಿ.
ಜಿಲ್ಲಾಮಟ್ಟದ ಜನತಾ ದರ್ಶನದ ಕೌಂಟರ್ಗಳು: ಇಲಾಖೆಗಳ ವಿವರ:
ಕೌಂಟರ್ 1: ಕಂದಾಯ ಇಲಾಖೆ, ನೋಂದಣಿ-ಮುದ್ರಾಂಕ ಇಲಾಖೆ, ಭೂ ದಾಖಲೆಗಳ ಉಪನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು.
ಕೌಂಟರ್ 2: ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ರೇಷ್ಮೆ ಇಲಾಖೆ, ಪಶುಪಾಲನಾ ಇಲಾಖೆ, ಮೀನುಗಾರಿಕಾ ಇಲಾಖೆ, ಅರಣ್ಯ ಇಲಾಖೆ.
ಕೌಂಟರ್ 3: ಪೊಲೀಸ್ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಇಲಾಖೆ (ಎಲ್ಲಾ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ), ಬೆಸ್ಕಾಂ ಕೆಪಿಟಿಸಿಎಲ್.
ಕೌಂಟರ್ 4: ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ದೇವರಾಜು ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ.
ಕೌಂಟರ್ 5: ಕಾನೂನು ಮತ್ತು ಮಾಪನ ಶಾಸ್ತ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಮಗ್ಗ ಜವಳಿ ಇಲಾಖೆ, ಅಂಚೆ ಇಲಾಖೆ, ಖಾದಿ-ಗ್ರಾಮೋದ್ಯೋಗ, ಸಾರಿಗೆ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ.
ಕೌಂಟರ್ 6: ಮಾರ್ಗದರ್ಶಿ ಬ್ಯಾಂಕ್ (ಲೀಡ್ ಬ್ಯಾಂಕ್), ಸಹಕಾರಿ ಸಂಘಗಳ ಉಪನಿಬಂಧಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ರೀಡಾ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಉದ್ಯೋಗ ವಿನಿಮಯ ಕೇಂದ್ರ, ಕಾರ್ಮಿಕ ಇಲಾಖೆ.
ಕೌಂಟರ್ 7: ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಸಣ್ಣ ನೀರಾವರಿ ಇಲಾಖೆ, ಕರ್ನಾಟಕ ನೀರು ಸರಬರಾಜು–ಒಳಚರಂಡಿ ಮಂಡಳಿ, ಕೆಆರ್ಡಿಸಿಎಲ್, ಕೆಆರ್ಐಡಿಎಲ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ.
ಕೌಂಟರ್ 8: ಹೇಮಾವತಿ ನಾಲಾ ವಲಯ, ಎತ್ತಿನಹೊಳೆ ನಾಲಾ ವಲಯ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ವಿಶೇಷ ಭೂಸ್ವಾಧೀನಾಧಿಕಾರಿಗಳು, ಎತ್ತಿನಹೊಳೆ/ಹೇಮಾವತಿ/ಕೆಐಎಡಿಬಿ/ರೈಲ್ವೆ ಯೋಜನೆ/ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ.
ಕೌಂಟರ್ 9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಕ್ಫ್ ಮಂಡಳಿ, ತೂಕ ಮತ್ತು ಅಳತೆ, ತುಮಕೂರು ವಿವಿ, ಜಿಲ್ಲಾ ಖಜಾನೆ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಸಣ್ಣ ಉಳಿತಾಯ, ಗ್ರಂಥಾಲಯ.
ಕೌಂಟರ್ 10: ಕರ್ನಾಟಕ ಗೃಹ ಮಂಡಳಿ, ಅಗ್ನಿಶಾಮಕ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್ಸ್, ನಗರಾಭಿವೃದ್ಧಿ ಪ್ರಾಧಿಕಾರ, ರಾಜ್ಯ ಹಣಕಾಸು ಸಂಸ್ಥೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ (ಜಿಲ್ಲಾ ಪಂಚಾಯತ್).
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


