ಬಳ್ಳಾರಿ: ಅಂಬೇಡ್ಕರ್ ಅವರ ಆಶಯಗಳನ್ನು ಉಳಿಸಲು ಪ್ರತಿಯೊಂದು ಮನೆಯಲ್ಲೂ ಒಬ್ಬರು ಐಎಎಸ್, ಐಪಿಎಸ್, ಇಂಜಿನಿಯರ್, ಡಾಕ್ಟರ್, ಒಟ್ಟಿನಲ್ಲಿ ಉನ್ನತ ವ್ಯಾಸಂಗ ಪಡೆದ ವಿದ್ಯಾವಂತರು ಇರಬೇಕು. ಇದೇ ಉದ್ದೇಶದಿಂದ ಬಳ್ಳಾರಿ ನಗರದಲ್ಲಿ ಅಂಬೇಡ್ಕರ್ ಅವರ ಹೆಸರಿನಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ಭಾಗದ ದಲಿತರು ಶಿಕ್ಷಣದಲ್ಲಿ ಮುಂದಿರುವುದರಿಂದ ತಮ್ಮ ಹಕ್ಕುಗಳಿಗಾಗಿ ಸಮರ್ಥವಾಗಿ ಹೋರಾಡುತ್ತಿದ್ದಾರೆ, ಆದರೆ ನಮ್ಮ ಭಾಗದಲ್ಲಿ ಶಿಕ್ಷಣದ ಕೊರತೆ ಇರುವುದರಿಂದ ಜನರು ಇನ್ನೂ ಮುಗ್ಧರಾಗಿದ್ದಾರೆ. ಹಾಗಾಗಿ ಈ ಗ್ರಂಥಾಲಯದ ಮೂಲಕ ಬಳ್ಳಾರಿಯ ಮಕ್ಕಳು ಓದಿ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾಗಿ, ಇಂಜಿನಿಯರ್, ಡಾಕ್ಟರ್ ಗಳಾಗಿ ಹೊರಹೊಮ್ಮಬೇಕು. ಈ ಯೋಜನೆಯ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಈಗಾಗಲೇ ಮೌಖಿಕವಾಗಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಅಸ್ಪೃಶ್ಯತೆ ಕೇವಲ ದೈಹಿಕವಾಗಿ ನಿರ್ಮೂಲನೆಯಾದರೆ ಸಾಲದು. ಅದು ಇಂದಿಗೂ ಜನರ ಮನಸ್ಸಿನಲ್ಲಿ ಬೇರೂರಿದೆ ಎಂದು ವಿಷಾದ ವ್ಯಕ್ತಪಡಿಸಿದ ಶಾಸಕರು, ಅಂಬೇಡ್ಕರ್ ಅವರು ಮೀಸಲಾತಿಯನ್ನು ನೀಡಿದ್ದು ಕೇವಲ ಮೀಸಲು ಕ್ಷೇತ್ರಗಳಿಗೆ ಸೀಮಿತವಾಗಲು ಅಲ್ಲ; ಬದಲಾಗಿ ದಲಿತರು ಸಾಮಾನ್ಯ ಕ್ಷೇತ್ರಗಳಲ್ಲೂ ಸ್ಪರ್ಧಿಸಿ ಮುಂಚೂಣಿಗೆ ಬರಬೇಕು ಎಂಬುದು ಅವರ ಆಶಯವಾಗಿತ್ತು ಎಂದು ತಿಳಿಸಿದರು.
ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ನಮಗೆ ದೊಡ್ಡ ಆಯುಧವಾಗಿದ್ದು, ಅದನ್ನು ಗೌರವಿಸಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯೋಣ. ದಲಿತರಿಗೆ ಮೀಸಲಾತಿ ಎಂಬುದು ಸಂವಿಧಾನಬದ್ಧ ಹಕ್ಕು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ದಲಿತರಿಗೆ ಎಂದಿಗೂ ಅನ್ಯಾಯ ಮಾಡುವುದಿಲ್ಲ ಎಂದು ಅಭಿಮತ ವ್ಯಕ್ತಪಡಿಸಿದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಹಿಂದೂಗಳಿಗೆ ಭಗವದ್ಗೀತೆ, ಮುಸ್ಲಿಮರಿಗೆ ಕುರಾನ್, ಕ್ರೆöÊಸ್ತರಿಗೆ ಬೈಬಲ್ ಇರುವಂತೆ, ಭಾರತೀಯರೆಲ್ಲರೂ ಒಂದೇ ಸೂರಿನಡಿ ಸಾಗಲು ‘ಸಂವಿಧಾನ’ವೇ ಪರಮ ಶ್ರೇಷ್ಠ ಗ್ರಂಥವಾಗಿದೆ ಎಂದು ಅಭಿಪ್ರಾಯಪಟ್ಟರು.
ಅಂಬೇಡ್ಕರ್ ಅವರು ಎಲ್ಲ ಜಾತಿ, ಧರ್ಮದ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಸಮಾನ ಮತದಾನದ ಹಕ್ಕನ್ನು ತಂದುಕೊಟ್ಟವರು. ಅಂಬೇಡ್ಕರ್ ಅವರು ಬರೆದ ‘ದ ಪ್ರಾಬ್ಲಮ್ ಆಫ್ ದಿ ರೂಪಿ’ ಪ್ರಬಂಧದ ಆಧಾರದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಯಾಯಿತು. ಅವರ ಆರ್ಥಿಕ ಚಿಂತನೆಗಳ ಫಲವಾಗಿಯೇ ಇಂದು ಬ್ಯಾಂಕುಗಳು ಸಾಮಾನ್ಯ ಜನರ ಮನೆಬಾಗಿಲಿಗೆ ತಲುಪಿವೆ ಮತ್ತು ರಾಷ್ಟ್ರೀಕರಣಗೊಂಡಿವೆ ಎಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು.
ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಆಸ್ತಿಯಲ್ಲಿ ಪಾಲು ನೀಡುವ ‘ಹಿಂದೂ ಕೋಡ್ ಬಿಲ್’ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಮಹಿಳೆಯರಿಗೆ ಸಮಾನತೆ ಸಿಗಬೇಕೆಂಬ ಉದ್ದೇಶದಿಂದ ಅವರು ತಮ್ಮ ಮಂತ್ರಿ ಪದವಿಗೇ ರಾಜೀನಾಮೆ ನೀಡಿದ ಘಟನೆಯನ್ನು ಮೆಲುಕು ಹಾಕಿದ ಅವರು, ಮಹಿಳೆಯರ ಉದ್ಧಾರಕ್ಕಾಗಿ ಅಂಬೇಡ್ಕರ್ ಮತ್ತು ಸಾವಿತ್ರಿಬಾಯಿ ಫುಲೆ ಅವರ ಕೊಡುಗೆಗಳನ್ನು ಸ್ಮರಿಸಿದರು.
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಸಮಾಜದ ಶೋಷಿತ ಮತ್ತು ಅನ್ಯಾಯಕ್ಕೊಳಗಾದ ವರ್ಗದ ಪರವಾಗಿ ಅಂದಿನ ಕಾಲದಲ್ಲಿ ಧ್ವನಿ ಎತ್ತಿದ ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್. ಅಂದಿನ ದಿನಗಳಲ್ಲಿ ಊಟ, ವಸತಿ ಮತ್ತು ಮನೆ ಇಲ್ಲದೇ ಕಷ್ಟದ ಪರಿಸ್ಥಿತಿಯಲ್ಲೂ ಹೋರಾಡಿ ಇಡೀ ಸಮಾಜಕ್ಕೆ ಸ್ವಾತಂತ್ರö್ಯ ಮತ್ತು ಹಕ್ಕುಗಳನ್ನು ತಂದುಕೊಟ್ಟ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರು ಎಂದು ಬಣ್ಣಿಸಿದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ಅಂಬೇಡ್ಕರ್ ಅವರು ವಿವಿಧ ರಂಗಗಳಲ್ಲಿ ಸರ್ವಶ್ರೇಷ್ಠರಾಗಿ ಹೊರಹೊಮ್ಮಲು ಅವರು ಶಿಕ್ಷಣದ ಮೂಲಕ ಪಡೆದ ಜ್ಞಾನವೇ ಮೂಲ ಕಾರಣ. ಅವರು ಕೇವಲ ಪತ್ರಕರ್ತರಲ್ಲದೆ, ರಾಜಕೀಯ ಧುರೀಣ, ಸಾಮಾಜಿಕ ಪರಿವರ್ತನಾಕಾರ, ವಿಶ್ವದ ಶ್ರೇಷ್ಠ ತತ್ವಜ್ಞಾನಿ ಮತ್ತು ಅರ್ಥಶಾಸ್ತ್ರಜ್ಞರಾಗಿದ್ದರು. ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಿದಾಗ ಮಾತ್ರ ಅಂಬೇಡ್ಕರ್ ಅವರ ಕನಸು ನನಸಾಗಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮಾತ್ರವಲ್ಲದೆ, ಸಮಾಜದ ಎಲ್ಲಾ ವರ್ಗದವರಿಗೂ ಸಮಾನತೆ ಮತ್ತು ಅವಕಾಶಗಳ ಅಧಿಕಾರ ನೀಡಿದ್ದಾರೆ. ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಮತ್ತು ಸಂವಿಧಾನದ ಆಶಯಗಳನ್ನು ಪಾಲಿಸುವ ಮೂಲಕ ಅವರ ಕನಸನ್ನು ನನಸು ಮಾಡೋಣ ಎಂದು ಕರೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರು ಮಾತನಾಡಿ, ಅಂಬೇಡ್ಕರ್ ಅವರ ಬಗ್ಗೆ ಇತರರು ಮಾಡಿರುವ ವಿಶ್ಲೇಷಣೆ ಅಥವಾ ವ್ಯಾಖ್ಯಾನಗಳನ್ನು ಓದುವುದಕ್ಕಿಂತ, ಸ್ವತಃ ಅಂಬೇಡ್ಕರ್ ಅವರೇ ಬರೆದಿರುವ ಪ್ರಬಂಧಗಳು ಮತ್ತು ಪುಸ್ತಕಗಳನ್ನು ಓದುವುದು ಹೆಚ್ಚು ಪ್ರಸ್ತುತ. ಇದರಿಂದ ಅವರ ನಿಜವಾದ ಆಲೋಚನೆಗಳು ಮತ್ತು ಸಮಾಜದ ಬಗೆಗಿನ ಅವರ ದೃಷ್ಟಿಕೋನ ನಮಗೆ ನೇರವಾಗಿ ಅರ್ಥವಾಗುತ್ತದೆ. ಹಾಗಾಗಿ ತಮ್ಮ ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡುವಂತೆ ಮತ್ತು ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸುವಂತೆ ತಿಳಿಸಿದರು.
ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಪ್ರೊ.ಎನ್.ಚಿನ್ನಸ್ವಾಮಿ ಸೋಸಲೆ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಗಾಥೆ, ವಿಚಾರಧಾರೆ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷ ಹೆಚ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್. ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್ ಮಂಜುನಾಥ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ– ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಚರ್ಮಕಾರರ ಆಧುನಿಕ ಪಾದುಕೆ ಕುಟೀರಗಳನ್ನು ಗಣ್ಯರು ಉದ್ಘಾಟನೆಗೊಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಯವರು ಸಂವಿಧಾನ ಪೀಠಿಕೆ ವಾಚನ ಮಾಡಿಸಿದರು. ಬಳಿಕ ಅಂಬೇಡ್ಕರ್ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ, ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಅದ್ದೂರಿ ಸ್ತಬ್ಧಚಿತ್ರ ಮೆರವಣಿಗೆ:
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಮೆರವಣಿಗೆಯು ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ನೀಡಿದವು.
ಮೆರವಣಿಗೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ರೂಪಿಸಿದ್ದ ವಿಧಾನಸೌಧ ಸ್ತಬ್ಧಚಿತ್ರ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜೆಸ್ಕಾಂ ಹಾಗೂ ವಿವಿಧ ಇಲಾಖೆಗಳ ವತಿಯಿಂದ ವಿವಿಧ ಸರ್ಕಾರದ ಕಾರ್ಯಕ್ರಮಗಳು ಮತ್ತು ವಿವಿಧ ಯೋಜನೆಗಳ ಮಾಹಿತಿ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆದವು.
ಮೆರವಣಿಗೆಗೆ ಮುನ್ನ ನಗರದ ಮೊದಲನೇ ರೈಲ್ವೇ ಗೇಟ್ ಬಳಿಯ ಸಮಾಜ ಕಲ್ಯಾಣ ಇಲಾಖೆಯ ಅಂಬೇಡ್ಕರ್ ಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೋಲಿಸ್ ಠಾಣೆ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ರೈಲ್ವೇ ಸ್ಟೇಷನ್ ರಸ್ತೆ ಮೂಲಕ ಮರಳಿ ಮುನಿಸಿಪಲ್ ಕಾಲೇಜು ಮೈದಾನಕ್ಕೆ ತಲುಪಿ ಸಂಪನ್ನಗೊಂಡಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


