ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ನಡೆಯುವ ತರಕಾರಿ ಸಂತೆಯನ್ನು ಏ.23ರಿಂದ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆಡಳಿತ ಕಚೇರಿಯ ಹಿಂಭಾಗದ ಖಾಲಿ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿಯ ಕಾರ್ಯದರ್ಶಿ ಎಂ.ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.
ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿ ಮಾತನಾಡಿದ ಅವರು, ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತ ಬಾಂಧವರು ಸಹಕರಿಸಬೇಕೆಂದು ಮನವಿ ಮಾಡಿದರು.
ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದ್ದು, ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗವನ್ನು ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು.
ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು.
ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ತರಕಾರಿ ಹೊರತುಪಡಿಸಿ ಇತರ ಯಾವುದೇ ಕೃಷಿಯೇತರ ವ್ಯಾಪಾರಸ್ಥರಿಗೆ ಆವರಣದ ಒಳಭಾಗದಲ್ಲಿ ವ್ಯಾಪಾರ ಮಾಡಲು ಕಡ್ಡಾಯವಾಗಿ ನಿಷೇಧ ಹೇರಲಾಗಿದೆ ಎಂದು ತಿಳಿಸಿದರು.
ಮಾರುಕಟ್ಟೆಗೆ ಬರುವ ರೈತರು ಮತ್ತು ಸಾರ್ವಜನಿಕರಿಗಾಗಿ ಈಗಾಗಲೇ ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ–ಹಂತವಾಗಿ ಪ್ಲಾಟ್ ಫಾರ್ಮ್ ಸೇರಿದಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಈಗ ನಡೆಯುತ್ತಿದ್ದ ಸಂತೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲಾಗುತ್ತಿದೆ. ರೈತರು ತಾವು ತರುವ ತರಕಾರಿಗಳನ್ನು ಸಮಿತಿಯು ನಿಗದಿಪಡಿಸಿದ ಜಾಗದಲ್ಲಿ ಮಾತ್ರ ಇಟ್ಟುಕೊಂಡು ವ್ಯಾಪಾರ ಮಾಡಬೇಕು. ಬರುವ ಗುರುವಾರದಿಂದಲೇ (ಏ.23) ಈ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ನಾಗೇಂದ್ರಕುಮಾರ್ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


