ತಿಪಟೂರು: 12ನೇ ಶತಮಾನದಲ್ಲಿಯೇ ಮಹಿಳಾ ಸಮಾನತೆ, ಶೋಷಣೆ ಮುಕ್ತ ಸಮಾಜ ಮತ್ತು ಮೂಢನಂಬಿಕೆಗಳ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ನಾವೆಲ್ಲರೂ ಇಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ತಿಳಿಸಿದರು.
ನಗರದ ತಮ್ಮ ಗುರು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಸವೇಶ್ವರರ ಪರಿಕಲ್ಪನೆಯ ಅಡಿಯಲ್ಲೇ ಆಡಳಿತ ನಡೆಸುತ್ತಿದ್ದಾರೆ. ಲಂಡನ್ನಲ್ಲಿ ಬಸವಣ್ಣನವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ವಿಶ್ವಕ್ಕೆ ಅವರ ಸಂದೇಶ ಸಾರಿದ್ದಾರೆ. ಅಲ್ಲದೆ, ದೇಶದಲ್ಲಿ ಮಹಿಳಾ ಸಮಾನತೆ ಮಸೂದೆ ಜಾರಿಗೆ ತರಲು ಪ್ರಧಾನಿಗಳು ಮುಂದಾದಾಗ ವಿರೋಧ ಪಕ್ಷದವರು ಅದಕ್ಕೆ ಅಡ್ಡಿಪಡಿಸಿದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ತಿಪಟೂರು ತಾಲೂಕಿನ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಿದ ಶಾಂತಕುಮಾರ್ ಅವರು ಸ್ಥಳೀಯ ಶಾಸಕರ ವಿರುದ್ಧ ಕಿಡಿಕಾರಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚಾಗುತ್ತಿದೆ. ಕೇವಲ ಮೂರು ತಿಂಗಳು ಮಾತ್ರ ಹೇಮಾವತಿ ನೀರು ಸರಬರಾಜು ಆಗಿದ್ದು, ನಗರಕ್ಕೆ ಸಮರ್ಪಕವಾಗಿ ನೀರು ಒದಗಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ದೂರಿದರು.
ಕಿಬ್ಬನಹಳ್ಳಿ ಹೋಬಳಿಯ ಗಣಿ ಬಾಧಿತ ಪ್ರದೇಶದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕು. ಇದರಿಂದ ಚಿಕ್ಕನಾಯಕನಹಳ್ಳಿ, ತುರುವೇಕೆರೆ ಮತ್ತು ಗುಬ್ಬಿ ತಾಲೂಕುಗಳ ಜನರಿಗೂ ಅನುಕೂಲವಾಗಲಿದೆ. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಮತಿಘಟ್ಟ ಶಿವಸ್ವಾಮಿ, ಜೆಡಿಎಸ್ ಅಧ್ಯಕ್ಷ ರಾಜು ಗೊರಗುಂಡನಹಳ್ಳಿ, ಸುದರ್ಶನ್, ಆಲದಳ್ಳಿಯ ಚನ್ನೇಗೌಡ, ನೇತ್ರಾನಂದ್, ನಟರಾಜ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


