ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪದ ಡಾ.ಪುನೀತ್ ರಾಜ್ ಕುಮಾರ್ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (TUDA) ಮತ್ತು ಮಹಾನಗರ ಪಾಲಿಕೆಯ ವಿಳಂಬ ನೀತಿಯ ವಿರುದ್ಧ ನಾಗರಿಕ ಹಿತರಕ್ಷಣಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳವಾರ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಡಾವಣೆಯ ನಾಗರಿಕರು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಡಾವಣೆಯ ಚರಂಡಿ ವ್ಯವಸ್ಥೆಯು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಒಳಚರಂಡಿ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ. ಬಡಾವಣೆಗೆ ಇನ್ನೂ ಅಧಿಕೃತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿಲ್ಲ. ಇದರ ಜೊತೆಗೆ ರಸ್ತೆ ಮೇಲೆ ಹರಿಯುವ ಕೊಳಚೆ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ಮುದಕರಿ, “ಪ್ರಾಧಿಕಾರವು ಕಾಮಗಾರಿಗಳನ್ನು ಪೂರ್ಣಗೊಳಿಸದೆಯೇ ಬಡಾವಣೆಯನ್ನು ಪಾಲಿಕೆಗೆ ಹಸ್ತಾಂತರಿಸಲು ಮುಂದಾಗಿದೆ. ಇತ್ತ ಪಾಲಿಕೆಯು ‘ಸೌಕರ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿಯಲ್ಲ’ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದೆ,” ಎಂದು ದೂರಿದರು.
“ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ 1976ರ ಸೆಕ್ಷನ್ 65 ಮತ್ತು 67ರ ಅನ್ವಯ, ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯದ ಜವಾಬ್ದಾರಿ ಪಾಲಿಕೆಯದ್ದೇ ಆಗಿರುತ್ತದೆ. ಪ್ರಾಧಿಕಾರ ಮತ್ತು ಪಾಲಿಕೆಯ ನಡುವಿನ ಸಮನ್ವಯದ ಕೊರತೆಗೆ ಸಾರ್ವಜನಿಕರು ಬಲಿಯಾಗಬಾರದು,” ಎಂದು ಅವರು ಒತ್ತಾಯಿಸಿದರು.
ತಕ್ಷಣವೇ ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಒಳಚರಂಡಿ ನೀರು ರಸ್ತೆ ಮೇಲೆ ಬರದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ಎಲ್ಲಾ ಕಾಮಗಾರಿಗಳಿಗೆ ಸ್ಪಷ್ಟವಾದ ಕಾಲಮಿತಿಯನ್ನು ನಿಗದಿಪಡಿಸಬೇಕು ಎಂದು ಇದೇ ವೇಳೆ ನಾಗರಿಕರು ಒತ್ತಾಯಿಸಿದರಲ್ಲದೇ, ಒಂದು ವೇಳೆ ಪಾಲಿಕೆಯು ಈ ಮನವಿಗೆ ತಕ್ಷಣ ಸ್ಪಂದಿಸದಿದ್ದಲ್ಲಿ, ಬಡಾವಣೆಯ ಎಲ್ಲಾ ನಿವಾಸಿಗಳು ಸೇರಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


