ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೆನಕನಹಳ್ಳಿ–ಮಿಡಿಗೇಶಿ ರಸ್ತೆಯ ಸಮೀಪವಿರುವ ಹೊಂಡಕ್ಕೆ ಬಿದ್ದು ಅಕ್ಕ ಮತ್ತು ತಮ್ಮ ಸಾವನ್ನಪ್ಪಿರುವ ಧಾರುಣ ಘಟನೆ ಭಾನುವಾರ ನಡೆದಿದೆ.
ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರ ಮಕ್ಕಳಾದ ಸುಚಿತ್ರಾ (11) ಮತ್ತು ರವೀಂದ್ರ (9) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಅವರ ಮೂವರು ಮಕ್ಕಳು ಅಂದು ಮೇಕೆ ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ನೀರು ಕುಡಿಯಲೆಂದು ಹೊಂಡದ ಬಳಿ ಹೋದಾಗ ಮೊದಲು ರವೀಂದ್ರ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ.
ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋದ ಅಕ್ಕ ಸುಚಿತ್ರಾ ಕೂಡ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಇವರಿಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮತ್ತೊಬ್ಬ ಮಗಳು ತಕ್ಷಣ ಪೋಷಕರನ್ನು ಕರೆತರಲು ಓಡಿದ್ದಾಳೆ. ಆದರೆ, ಪೋಷಕರು ಸ್ಥಳಕ್ಕೆ ಬರುವಷ್ಟರಲ್ಲಿ ಇಬ್ಬರೂ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಮನೆಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


