ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲಿ ಭಾರಿ ಸಂಚಲನ ಉಂಟಾಗಿದ್ದು, ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯ ನಂತರ ಬಿಜೆಪಿಯ ಡಿ.ಎನ್. ಜೀವರಾಜ್ ಅವರು ಅಧಿಕೃತವಾಗಿ ಜಯಗಳಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನ ರದ್ದಾದಂತಾಗಿದೆ.
2023ರ ಚುನಾವಣೆಯಲ್ಲಿ 201 ಮತಗಳಿಂದ ಸೋತಿದ್ದ ಡಿ.ಎನ್. ಜೀವರಾಜ್, ಈಗ ಮರು ಎಣಿಕೆಯ ನಂತರ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಆದೇಶದ ಮೇರೆಗೆ ಕಳೆದ ಶನಿವಾರ ಅಂಚೆ ಮತಗಳ ಮರು ಪರಿಶೀಲನೆ ಮತ್ತು ಎಣಿಕೆ ನಡೆಸಲಾಗಿತ್ತು.
ಮರು ಎಣಿಕೆಯ ವೇಳೆ ಕಾಂಗ್ರೆಸ್ನ ರಾಜೇಗೌಡ ಅವರಿಗೆ ಈ ಹಿಂದೆ ಬಂದಿದ್ದ ಅಂಚೆ ಮತಗಳಲ್ಲಿ 255 ಮತಗಳು ಅಮಾನ್ಯಗೊಂಡಿವೆ. ಇದರಿಂದಾಗಿ ಅವರ ಒಟ್ಟು ಮತಗಳ ಸಂಖ್ಯೆ ಕುಸಿದಿದ್ದು, ಜೀವರಾಜ್ ಅವರು ಮುನ್ನಡೆ ಸಾಧಿಸಿದರು.
ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಡಿ.ಎನ್.ಜೀವರಾಜ್ ಅವರಿಗೆ ಶೃಂಗೇರಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮತಪತ್ರಗಳನ್ನು ತಿದ್ದಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೊಳ್ಳಿ ಅವರು, ಈ ಹಿಂದಿನ ಜಿಲ್ಲಾಧಿಕಾರಿ ಕೆ.ಎನ್. ರಮೇಶ್, ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ಹಾಗೂ ಡಿ.ಎನ್. ಜೀವರಾಜ್ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜಯನಗರ ಕ್ಷೇತ್ರದಂತೆ ಇಲ್ಲಿಯೂ ಅನ್ಯಾಯವಾಗಿದೆ. ನಾವು ಇದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ ಮತ್ತು ನ್ಯಾಯಾಲಯದಲ್ಲಿ ಹೋರಾಟ ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.
ಈ ಹಠಾತ್ ಬೆಳವಣಿಗೆಯಿಂದಾಗಿ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ಬಿರುಸುಗೊಂಡಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


