ಬೆಂಗಳೂರು: ರಾಜ್ಯ ವಸತಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರ ಬೆಂಗಳೂರಿನ ನಿವಾಸದಲ್ಲಿ ನಡೆದಿದ್ದ ಭಾರಿ ಪ್ರಮಾಣದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಶಿವಾಜಿನಗರ ಪೊಲೀಸರು ಭೇದಿಸಿದ್ದಾರೆ. ಸಚಿವರ ತಾಯಿಯ ನಿಕಟ ಸಂಬಂಧಿಯೇ ಈ ಕೃತ್ಯದ ಮಾಸ್ಟರ್ ಮೈಂಡ್ ಆಗಿರುವುದು ಬೆಳಕಿಗೆ ಬಂದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸೈಯದ್ ಅಮೀರ್ ಮತ್ತು ಆತನ ಸಹಚರ ಅಮಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಸೈಯದ್ ಅಮೀರ್ ಸಚಿವ ಜಮೀರ್ ಅವರ ತಾಯಿಯ ಹತ್ತಿರದ ಸಂಬಂಧಿಯಾಗಿದ್ದು, ಈತನಿಗೆ ಸಚಿವರ ಮನೆಗೆ ಮುಕ್ತ ಪ್ರವೇಶವಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಈತ, 2023ರಿಂದಲೇ ಯಾರಿಗೂ ಅನುಮಾನ ಬಾರದಂತೆ ಸ್ವಲ್ಪ ಸ್ವಲ್ಪವೇ ಚಿನ್ನಾಭರಣಗಳನ್ನು ಕದಿಯುತ್ತಿದ್ದನು. ಒಟ್ಟು ಸುಮಾರು 1.20 ಕೆಜಿ ಚಿನ್ನದ ಆಭರಣಗಳನ್ನು ಈತ ಲಪಟಾಯಿಸಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿಗಳು ಟ್ರಾವೆಲ್ಸ್ ವ್ಯವಹಾರ ನಡೆಸುತ್ತಿದ್ದರು. ಆದರೆ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿ ಸಾಲಕ್ಕೆ ಸಿಲುಕಿದ್ದರು. ಈ ಸಾಲ ತೀರಿಸಲು ಮತ್ತು ಕದ್ದ ಚಿನ್ನವನ್ನು ಅಡವಿಟ್ಟು ಬಂದ ಹಣದಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿ ಶ್ರೀಮಂತರಾಗುವ ಆಸೆಯಿಂದ ತನ್ನ ಸಂಬಂಧಿಕರ ಮನೆಯನ್ನೇ ಗುರಿಯಾಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಚಿವರ ತಾಯಿ ಏಪ್ರಿಲ್ 15 ರಂದು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಬಗ್ಗೆ ದೂರು ದಾಖಲಿಸಿದ್ದರು. ಮನೆಯಲ್ಲಿದ್ದ ಸುಮಾರು 1.3 ಕೆಜಿ ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ಅವರು ತಿಳಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ, ಸೈಯದ್ ಅಮೀರ್ ಮೇಲೆ ಅನುಮಾನ ಬಂದಿತ್ತು. ಸಚಿವರ ಮನೆಗೆ ಬರುವುದನ್ನು ಸಡನ್ ಆಗಿ ನಿಲ್ಲಿಸಿದ್ದ ಆತ, ಕುಟುಂಬದವರು ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.
ಬಂಧಿತರಿಂದ ಪೊಲೀಸರು ಪ್ರಸ್ತುತ 1.13 ಕೋಟಿ ರೂಪಾಯಿ ಮೌಲ್ಯದ 759 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉಳಿದ ಆಭರಣಗಳ ಪತ್ತೆಗೆ ತನಿಖೆ ಮುಂದುವರಿದಿದೆ. ನಂಬಿಕಸ್ಥ ಸಂಬಂಧಿಯೇ ಇಂತಹ ದ್ರೋಹ ಎಸಗಿರುವುದು ಸಚಿವರ ಕುಟುಂಬಕ್ಕೆ ಆಘಾತ ತಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


