ತಿಪಟೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಮಾಡದಿದ್ದರೆ, ಅಂತಹವರ ಹುದ್ದೆಯಿಂದ ನಿರ್ಗಮಿಸಬಹುದು ಇಲ್ಲವಾದರೆ, ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ. ಷಡಕ್ಷರಿ ಎಚ್ಚರಿಕೆ ನೀಡಿದರು.
ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ನಡೆದ ಮುಖಂಡರುಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ನೀಡಿರುವ ಜವಾಬ್ದಾರಿಗಳನ್ನು ಉತ್ತಮವಾಗಿ ನಿರ್ವಹಿಸಿ ಪಕ್ಷ ಸಂಘಟನೆ ಬಲಪಡಿಸಬೇಕು. ಶೀಘ್ರದಲ್ಲೇ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷದ ಚಿಹ್ನೆ ಬರಬಹುದಾದ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಕಾರ್ಯಕರ್ತರನ್ನು ಸನ್ನದ್ಧಗೊಳಿಸಬೇಕು. ಯಾರಿಗೆ ಪಕ್ಷ ನೀಡಿರುವ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಿಲ್ಲವೋ ಅವರು ರಾಜೀನಾಮೆ ನೀಡಿ, ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ತಾಲ್ಲೂಕಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ನನ್ನೊಂದಿಗೆ ಚರ್ಚಿಸಬಹುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಪಕ್ಷ ಸದೃಢವಾಗಿದ್ದು, ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ವರಿಷ್ಠರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೇನೂರು ಕಾಂತರಾಜು ಮಾತನಾಡಿ, ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಬೇಕು. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೂ ಶಾಸಕರೊಂದಿಗೆ ನೇರವಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.
ಕೆಪಿಸಿಸಿ ಸದಸ್ಯ ಎ.ಯೋಗೇಶ್ ಮಾತನಾಡಿ, ಪಕ್ಷವನ್ನು ಬಲವಾಗಿ ಕಟ್ಟಲು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ನಮ್ಮ ನೆಚ್ಚಿನ ಶಾಸಕರಾದ ಕೆ.ಷಡಕ್ಷರಿ ರವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸದೃಢಗೊಳಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕಾಂಗ್ರೆಸ್ ನಗರಾಧ್ಯಕ್ಷ ಟಿ.ಎನ್.ಪ್ರಕಾಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ರಾಜ್, ಪರಿಶಿಷ್ಟ ಜಾತಿ ಘಟಕದ ಕೊಪ್ಪ ಶಾಂತಪ್ಪ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ಹೂರ್ ಬಾನು ಸೇರಿದಂತೆ ನಗರಸಭೆ ಮಾಜಿ ಸದಸ್ಯರು, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಮುಖಂಡರು ಹಾಜರಿದ್ದರು.
ಮುಖಂಡರುಗಳ ಬೇಸರ:
ಸರ್ಕಾರ ಬಂದು ಮೂರು ವರ್ಷ ಕಳೆದರೂ ನಮ್ಮ ಸಮಸ್ಯೆಗಳನ್ನು ಯಾರೂ ಕೂಡ ಆಲಿಸುತ್ತಿಲ್ಲ ಹಾಗೂ ಪರಿಹಾರ ದೊರಕಿಸಿ ಕೊಡುವಲ್ಲಿ ವಿಫಲರಾಗಿದ್ದಾರೆ. ತಾಲೂಕಿನಲ್ಲಿ ಅಧಿಕಾರಿಗಳ ದರ್ಬಾರ್ ನಿಂದ ಮುಖಂಡರು ಹಾಗೂ ಕಾರ್ಯಕರ್ತರು ರೋಸಿ ಹೋಗಿದ್ದಾರೆ. ತಾಲೂಕಿನಲ್ಲಿ ತಾವುಗಳು ಬಿಟ್ಟರೆ, ಇನ್ಯಾವುದೇ ಸ್ಥಳೀಯ ಸಂಸ್ಥೆ, ಎಪಿಎಂಸಿ ಹಾಗೂ ನಗರಸಭೆ ಆಡಳಿತ ಇಲ್ಲವಾದದ್ದರಿಂದ ಅಧಿಕಾರಿಗಳು ನಮ್ಮ ಮಾತನ್ನು ಕೇಳುತ್ತಿಲ್ಲ. ನಮ್ಮ ಮಾತಿಗೆ ಕಿಂಚಿತ್ತು ಬೆಲೆ ಕೊಡುವ ಬೆಲೆ ಕೊಡದ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಸಭೆಯಲ್ಲಿ ಕೆಲವು ಮುಖಂಡರುಗಳು ಬೇಸರ ವ್ಯಕ್ತಪಡಿಸಿ, ಹೀಗೆ ಮುಂದುವರೆದರೆ, ಮತದಾರರಲ್ಲಿ ಮತವನ್ನು ಕೇಳಲು ಕಷ್ಟವಾಗುತ್ತದೆ. ಗ್ರಾಮೀಣ ಮತ್ತು ನಗರ ಭಾಗದಲ್ಲಿ ಪಕ್ಷ ಸಂಘಟನೆ ಮಾಡಲು ಕಷ್ಟವಾಗುತ್ತದೆ. ತಾವುಗಳು (ಶಾಸಕರು) ಕೂಡಲೇ ಅಧಿಕಾರಿಗಳ ಸಭೆ ಕರೆದು, ಸಾರ್ವಜನಿಕರಿಗೆ ಮತ್ತು ಮುಖಂಡರುಗಳಿಗೆ ಸ್ಪಂದಿಸಿ, ಕಚೇರಿಗಳಿಗೆ ಸಾರ್ವಜನಿಕರು, ವಯೋವೃದ್ಧರು, ಮಹಿಳೆಯರು ಮತ್ತು ರೈತರು ಬಂದಾಗ ಅವರಿಗೆ ಆಗಿರುವ ಅನ್ಯಾಯವನ್ನು ಅಥವಾ ಇನ್ಯಾವುದೇ ಸರ್ಕಾರಿ ಕೆಲಸವನ್ನು ಚಾಚು ತಪ್ಪದೆ ಪರಿಹಾರ ರೂಪದಲ್ಲಿ ಮಾಡುವಂತೆ ಸರಿಪಡಿಸುವಂತೆ ಸೂಚಿಸಿ, ಅಧಿಕಾರಿಗಳ ನಡವಳಿಕೆಗಳನ್ನು ಬದಲಾವಣೆ ಮಾಡಿಕೊಳ್ಳುವಂತೆ ತಿಳಿಸಬೇಕೆಂದು ಸಭೆಯಲ್ಲಿ ಮುಖಂಡರುಗಳು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


