ಪಾವಗಡ: ರಾಜ್ಯದಲ್ಲಿ ನೂತನವಾಗಿ ಪ್ರಮಾಣ ಸ್ವೀಕಾರ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದ ಕಸರತ್ತು ಬಿರುಸುಗೊಳ್ಳುತ್ತಿರುವ ಬೆನ್ನಲ್ಲೇ, ಹಿಂದುಳಿದ ಗಡಿ ತಾಲ್ಲೂಕಾದ ಪಾವಗಡದ ಶಾಸಕ ಎಚ್.ವಿ. ವೆಂಕಟೇಶ್ ಸಚಿವ ಸ್ಥಾನದ ಆಕಾಂಕ್ಷಿ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. “ಯುವ ಸಚಿವರ ಕೋಟಾದಡಿಯಲ್ಲಿ ನನಗೆ ಸಚಿವ ಸ್ಥಾನದ ಜವಾಬ್ದಾರಿ ಒದಗಿಸಬೇಕು” ಎಂದು ಪಕ್ಷದ ಹೈಕಮಾಂಡ್ ಅವರನ್ನು ಬಲವಾಗಿ ಒತ್ತಾಯಿಸಿದ್ದಾರೆ.
ಪಟ್ಟಣದ ಎಪಿಎಂಸಿ ಮೈದಾನದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿತ್ತನೆ ಬೀಜಗಳಾದ ಶೇಂಗಾ,ತೊಗರಿ, ಅಲಸಂದೆ ಮತ್ತು ಬತ್ತದ ಬೀಜಗಳನ್ನು ವಿತರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸತತ 14 ವರ್ಷಗಳ ಕಾಲ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಎರಡು ಬಾರಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ, ಆ ಅನುಭವ ನನಗಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತ್ಯಂತ ಕಡಿಮೆ ಮತಗಳ ಅಂತರದಿಂದ ಪರಾಭವಗೊಂಡಿದ್ದರೂ, ಧೃತಿಗೆಡದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ. ನನ್ನ ನಿರಂತರ ಶ್ರಮವನ್ನು ಗುರುತಿಸಿ ಕ್ಷೇತ್ರದ ಜನತೆ ಈ ಬಾರಿ ನನ್ನನ್ನು ಶಾಸಕನಾಗಿ ಆರಿಸಿದ್ದಾರೆ. ಹೀಗಾಗಿ ಸಹಜವಾಗಿಯೇ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ನಮ್ಮ ತಂದೆಯವರು ಈ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಲ್ಲದೆ, ಎರಡು ಬಾರಿ ಸಚಿವರಾಗಿ ರಾಜ್ಯ ಮತ್ತು ಕ್ಷೇತ್ರಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಅವರ ಜನಪರ ಆಡಳಿತವೇ ನನಗೆ ಪ್ರೇರಣೆ. ಯುವ ಶಾಸಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನನ್ನ ಸೇವೆಯನ್ನು ಪರಿಗಣಿಸಬೇಕು, ಈ ವಿಷಯವಾಗಿ ನಾನು ಶೀಘ್ರದಲ್ಲೇ ಸಿಎಲ್ ಪಿ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಲಿದ್ದೇನೆ, ಸುಮಾರು 15ಕ್ಕೂ ಹೆಚ್ಚು ಶಾಸಕರು ನನ್ನ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ, ಪಕ್ಷದ ಹೈಕಮಾಂಡ್ ನನ್ನ ನಿಷ್ಠೆ ಮತ್ತು ಸಂಘಟನಾ ಚಾತುರ್ಯವನ್ನು ನಂಬಿ ಸಚಿವ ಸ್ಥಾನದ ಜವಾಬ್ದಾರಿ ನೀಡಿದರೆ, ಅತ್ಯಂತ ಪ್ರಾಮಾಣಿಕತೆಯಿಂದ ಮತ್ತು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ. ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಹಾಗೂ ನರಸಿಂಹರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಜಯ್ ಕುಮಾರ್, ಪುರಸಭಾ ಮಾಜಿ ಅಧ್ಯಕ್ಷರಾದ ಸುದೇಶ್ ಬಾಬು,ಪಿ ಹೆಚ್ ರಾಜೇಶ್,ಶಂಕರ್ ರೆಡ್ಡಿ,ಗುತ್ತಿಗೆದಾರರಾದ ಆರ್.ಎ ಹನುಮಂತರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಡಿ ಮಂಜುನಾಥ್,ಕಲ್ಪವೃಕ್ಷ ರವಿ, ಶಿವಮೂರ್ತಿ ರವರು ಸೇರಿ ಇನ್ನೂ ಹಲವರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


