ಕೊರಟಗೆರೆ: ಕ್ಷೇತ್ರದಿಂದ ಭರ್ಜರಿ ಜಯಗಳಿಸಿರುವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ (DCM) ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಕೊರಟಗೆರೆ ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಭರ್ಜರಿಯಾಗಿ ಸಂಭ್ರಮಿಸಿದರು.
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಆರ್. ಓಬಳರಾಜು ಅವರು, “ನಮ್ಮ ಕ್ಷೇತ್ರದ ಶಾಸಕರು ಹಾಗೂ ಜನಪ್ರಿಯ ನಾಯಕರಾದ ಡಾ. ಜಿ. ಪರಮೇಶ್ವರ್ ಅವರು ಎರಡನೇ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಇಡೀ ಕ್ಷೇತ್ರಕ್ಕೆ ಸಂತೋಷ ತಂದಿದೆ. ಅವರ ಅಪಾರ ಸೇವೆ ಮತ್ತು ಹಿರಿತನಕ್ಕೆ ಅವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ, ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ” ಎಂದರು.
ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎಲ್. ರಾಜಣ್ಣ ಮಾತನಾಡಿ, “ಡಾ. ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿರುವುದು ಕೊರಟಗೆರೆ ವಿಧಾನಸಭಾ ಕ್ಷೇತ್ರ, ತುಮಕೂರು ಜಿಲ್ಲೆ ಮಾತ್ರವಲ್ಲದೆ ಇಡೀ ರಾಜ್ಯದ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಅತ್ಯಂತ ಸಜ್ಜನ ರಾಜಕಾರಣಿಯಾದ ಅವರು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗುವುದನ್ನು ನಾವೆಲ್ಲಾ ನೋಡಲಿದ್ದೇವೆ” ಎಂದು ಆಶಯ ವ್ಯಕ್ತಪಡಿಸಿದರು.
ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ವಿ. ಮಂಜುನಾಥ್ ಮಾತನಾಡಿ, “ರಾಜ್ಯದ ಹಿರಿಯ ದಲಿತ ನಾಯಕರು ಹಾಗೂ ಸರ್ವ ಜನಾಂಗದ ಹಿತೈಷಿಯಾದ ಡಾ. ಜಿ. ಪರಮೇಶ್ವರ್ ಅವರು ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಇತಿಹಾಸ ಅವರದ್ದಾಗಿದೆ. ಈಗ ಎರಡನೇ ಬಾರಿಗೆ ಡಿಸಿಎಂ ಆಗಿರುವ ಅವರು ರಾಜ್ಯದ ಜನತೆಗೆ ಅತ್ಯುತ್ತಮ ಆಡಳಿತ ನೀಡಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವಿಜಯೋತ್ಸವದ ಸಂದರ್ಭದಲ್ಲಿ ಪ್ರಮುಖ ಮುಖಂಡರುಗಳಾದ ನಾಗಭೂಷಣ್, ಮಹೇಶ್, ಕೆ.ಬಿ. ಲೋಕೇಶ್, ಕೆ.ವಿ. ಪುರುಷೋತ್ತಮ್, ಕೆ.ಎಂ. ಸುರೇಶ್, ಕೆ.ಎಲ್. ಆನಂದ್, ವಿಶ್ವನಾಥ್, ಆನಂದ್, ದೀಪಕ್, ರಂಗನಾಥ್, ಅಶ್ವಥಪ್ಪ, ಶ್ಯಾಮ್, ಗೋವಿಂದರಾಜು ಸೇರಿದಂತೆ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದು, ಘೋಷಣೆಗಳನ್ನು ಕೂಗುತ್ತಾ ಸಂಭ್ರಮ ವ್ಯಕ್ತಪಡಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


