ಕೊರಟಗೆರೆ: ಅನಾರೋಗ್ಯದ ನಡುವೆಯೂ ಅಭಿಮಾನಿಗಳು ಆಯೋಜಿಸಿದ್ದ ಬೃಹತ್ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಸಾವಿರಾರು ಕಾರ್ಯಕರ್ತರು ಅದೂರಿ ಸ್ವಾಗತ ಕೋರಿದರು. ಸಿಡಿಮದ್ದಿನ ಸಂಭ್ರಮ, ಘೋಷಣೆಗಳು ಹಾಗೂ ಮಹಿಳೆಯರ ನೃತ್ಯದ ಮೂಲಕ ನೆಚ್ಚಿನ ನಾಯಕರಿಗೆ ಭಾವಪೂರ್ಣ ಸ್ವಾಗತ ದೊರೆಯಿತು.
ಕೊರಟಗೆರೆಯ ಜೂನಿಯರ್ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಾ .ಜಿ ಪರಮೇಶ್ವರ್, ಎರಡನೇ ಬಾರಿ ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ನಿಲ್ಲಲು ಕೊರಟಗೆರೆ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ. ಹೈಕಮಾಂಡ್ ಅವಕಾಶ ನೀಡಿರಬಹುದು, ಆದರೆ ನೀವು ಗೆಲ್ಲಿಸದಿದ್ದರೆ ಈ ಸ್ಥಾನ ನಮಗೆ ದೊರೆಯುತ್ತಿರಲಿಲ್ಲ ಎಂದು ಕೃತಜ್ಞತೆ ಸಲ್ಲಿಸಿದರು.
ನನಗೆ ಎಂಟು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ, ಎರಡು ಬಾರಿ ಉಪಮುಖ್ಯಮಂತ್ರಿಯಾಗಿ ಹಾಗೂ ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸುವ ಅವಕಾಶ ಸಿಕ್ಕಿರುವುದಕ್ಕೆ ಕೊರಟಗೆರೆ ಕ್ಷೇತ್ರದ ಜನರ ಬೆಂಬಲವೇ ಕಾರಣ. ಸಿದ್ದರಾಮಯ್ಯರ ಮಾರ್ಗದರ್ಶನ ಪಕ್ಷಕ್ಕೆ ಅತ್ಯಗತ್ಯವಾಗಿದ್ದು, 3 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಜನಪರ ಯೋಜನೆಗಳನ್ನು ಜಾರಿಗೆ ತಂದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸಿದ್ಧಾಂತಗಳನ್ನು ಎತ್ತಿ ಹಿಡಿದಿದ್ದು, ಮುಂದಿನ ದಿನಗಳಲ್ಲಿಯೂ ಅವರ ಮಾರ್ಗದರ್ಶನ ಪಕ್ಷಕ್ಕೆ ಅಗತ್ಯವಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇತ್ತೀಚೆಗೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ್ದು, ಅನಾರೋಗ್ಯದ ಕಾರಣದಿಂದ ತಾವು ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ ಅವರು, ಜನಪರ ಕಾರ್ಯಕ್ರಮಗಳ 10 ಅನುಷ್ಠಾನದಲ್ಲಿ ಅಧಿಕಾರಿಗಳು ಹೆಚ್ಚಿನ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು. ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು ಸಾರ್ವಜನಿಕ ಸೇವೆಗೆ ಆದ್ಯತೆ ನೀಡಬೇಕು. ಕರ್ತವ್ಯ ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಸಂಕಲ್ಪ ತೊಡಲಾಗಿದ್ದು, ಆಗಸ್ಟ್ ವೇಳೆಗೆ ನೀರು ಹರಿಯಲಿದೆ. ಜುಲೈನಲ್ಲಿ ನೀರು ಹರಿಯಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರದ ಅರಣ್ಯ ಕಾಯ್ದೆ ಸಂಬಂಧಿತ ಅನುಮತಿಗಳ ಕಾರಣ ವಿಳಂಬವಾಯಿತು. ಈಗ ಅನುಮತಿ ದೊರೆತಿದ್ದು, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಆಗಸ್ಟ್ ವೇಳೆಗೆ ನೀರು ಹರಿಯಲಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕ ಗಂಗಹನುಮಯ್ಯ, ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್, ಕೆಎಸ್ಆರ್ಟಿಸಿ ನಿಗಮ ಮಂಡಳಿ ಉಪಾಧ್ಯಕ್ಷ ನಿಮಿತ್ ರಾಜ್ ಮೌರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅರಕೆರೆ ಶಂಕರ್, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಕಾಂಗ್ರೆಸ್ ಮಹಿಳಾಧ್ಯಕ್ಷೆ ಜಯಮ್ಮ, ಮುಖಂಡರಾದ ಪ್ರೇಮಾ ಮಹಾಲಿಂಗಪ್ಪ, ಬಲರಾಮಯ್ಯ, ಕೆ.ಆರ್.ಓಬಳರಾಜು, ಎಲ್.ರಾಜಣ್ಣ, ವಿನಯ್, ಅರವಿಂದ್, ಲಕ್ಷ್ಮಿ, ಲಕ್ಷ್ಮಮ್ಮ, ಯುವ ಅಧ್ಯಕ್ಷ ಭೈರೇಶ್, ರಘುವೀರ್, ಕೆವಿಎಲ್ಎಂ ಮಂಜು, ಅಮರ್, ಮಹೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಿ.ಕೆ.ಶಿವಕುಮಾರ್ ಕೈ ಬಲಪಡಿಸಿ:
ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ತಂದುಕೊಡುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರವೂ ಮಹತ್ತದ್ದಾಗಿದೆ. ಅವರ ನಾಯಕತ್ವವನ್ನು ಹೈಕಮಾಂಡ್ ಗುರುತಿಸಿ ಅವಕಾಶ ನೀಡಿದೆ. ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ಕಾಂಗ್ರೆಸ್ ಸರ್ಕಾರ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಿದೆ. ಸಿದ್ದರಾಮಯ್ಯ ಅವರ ಮಾರ್ಗದರ್ಶನ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಬೈರಗೊಂಡ್ಲು ಸುತ್ತಮುತ್ತ 5 ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣ ಯೋಜನೆ ಜನರ ವಿರೋಧದಿಂದ ಕೈಬಿಟ್ಟು, ಈಗ ಒಡೆಯರಹಳ್ಳಿ ಸಮೀಪ ಸುಮಾರು 500 ಎಕರೆ ವ್ಯಾಪ್ತಿಯಲ್ಲಿ ಸಣ್ಣ ಡ್ಯಾಂ ನಿರ್ಮಿಸಲು ಮುಂದಾಗಿದ್ದು, ಇದಕ್ಕೂ ವಿರೋಧ ವ್ಯಕ್ತವಾಗುತ್ತಿದೆ. ಕೊರಟಗೆರೆ ಜನರು ಭೂಮಿ ನೀಡದೆ ಎತ್ತಿನಹೊಳೆ ನೀರು ನಿರೀಕ್ಷಿಸುತ್ತಿದ್ದಾರೆ ಎಂಬ ಆರೋಪ ದೂರವಾಗಬೇಕು. ರೈತರು ಯೋಜನೆಗೆ ಸಹಕರಿಸಬೇಕು. ಭೂಸ್ವಾಧೀನಕ್ಕೆ ನ್ಯಾಯಯುತ ಪರಿಹಾರ ನೀಡಲಾಗುವುದು. ನಮ್ಮ ಕೊರಟಗೆರೆ ತಾಲೂಕಿನ 67 ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಹರಿಸಲಾಗುವುದು.
— ಡಾ.ಜಿ.ಪರಮೇಶ್ವರ್, ಡಿಸಿಎಂ


