ಸರಗೂರು: “ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ” ಎಂದು ಲಯನ್ಸ್ ಅಕಾಡೆಮಿ ಶಾಲೆಯ ಪ್ರಾಂಶುಪಾಲರಾದ ದಾಸಚಾರಿ ತಿಳಿಸಿದರು.
ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯದ ರಕ್ಷಣೆಗೆ ಯೋಗ ಅತ್ಯಂತ ಸಹಕಾರಿಯಾಗಿದೆ. ಇಂದಿನ ಆಧುನಿಕ ಜೀವನಶೈಲಿ ಹಾಗೂ ಆಹಾರ-ವಿಹಾರಗಳ ವೈಪರೀತ್ಯದಿಂದಾಗಿ ನಾವು ಅನೇಕ ಮಾನಸಿಕ ಒತ್ತಡಗಳಿಗೆ ಒಳಗಾಗುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸುಖ-ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಅವರು ಆಶಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಪದ್ಮಶ್ರೀ ಅವರು, “ಯೋಗದಿಂದ ದೇಹ, ಮನಸ್ಸು ಮತ್ತು ಆರೋಗ್ಯ ಸುಸ್ಥಿರವಾಗಿರಲು ಸಾಧ್ಯ. ಯೋಗವು ಎಲ್ಲಾ ರೋಗಗಳಿಗೂ ರಾಮಬಾಣವಿದ್ದಂತೆ. ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಕೆಲವು ಆಸನಗಳನ್ನಾದರೂ ಮಾಡುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕಾಗಿ ನಾವೆಲ್ಲರೂ ಯೋಗ ಮಾಡುವ ಸಂಕಲ್ಪ ಮಾಡಬೇಕು” ಎಂದು ಅಭಿಪ್ರಾಯಪಟ್ಟರು.
ಮುಂದುವರಿದು ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ಶಿಬಿರಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಲಯನ್ಸ್ ಅಕಾಡೆಮಿ ಶಾಲೆಯ ಸಹಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗಾಸನಗಳನ್ನು ಪ್ರದರ್ಶಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




