ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock Election) ಅತ್ಯಂತ ಪರಿಣಾಮಕಾರಿ ವಿಧಾನವಾಗಿದೆ ಎಂದು ವಿ.ಎಸ್. ವಿದ್ಯಾ ಸಂಸ್ಥೆಯ ನಿರ್ದೇಶಕರಾದ ಶಂಕರ್ ತಿಳಿಸಿದರು.
ಪಟ್ಟಣದ ವಿ.ಎಸ್. ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಣುಕು ಮತದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲೇ ಚುನಾವಣಾ ಪ್ರಕ್ರಿಯೆಯನ್ನು ಅನುಭವಿಸುವ ಅವಕಾಶ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ನೈಜ ಚುನಾವಣೆಯ ಮಾದರಿಯಲ್ಲೇ ಎಲ್ಲಾ ಹಂತಗಳನ್ನು ಅತ್ಯಂತ ಶಿಸ್ತುಬದ್ಧವಾಗಿ ಅನುಸರಿಸಲಾಯಿತು. ಆಸಕ್ತ ವಿದ್ಯಾರ್ಥಿಗಳು ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿ, ಬಳಿಕ ತಮ್ಮ ಗುರಿ ಹಾಗೂ ಉದ್ದೇಶಗಳನ್ನು ಸಹಪಾಠಿಗಳಿಗೆ ತಿಳಿಸುತ್ತಾ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು.
ಚುನಾವಣೆಯ ದಿನದಂದು ಶಾಲೆಯಲ್ಲಿ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯನ್ನು ತೋರಿಸಿ ಬ್ಯಾಲೆಟ್ ಪೇಪರ್ ಮೂಲಕ ಅತ್ಯುತ್ಸಾಹದಿಂದ ಮತ ಚಲಾಯಿಸಿದರು. ನೈಜ ಚುನಾವಣೆಯ ಅನುಭವವನ್ನು ಕಟ್ಟಿಕೊಡುವ ಉದ್ದೇಶದಿಂದ ಮತ ಚಲಾಯಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯ ಎಡಗೈ ತೋರುಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಯಿತು.
ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ಪೋಲಿಂಗ್ ಅಧಿಕಾರಿ, ಪ್ರಿಸೈಡಿಂಗ್ ಅಧಿಕಾರಿ, ರಿಟರ್ನಿಂಗ್ ಅಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಮಹತ್ವದ ಜವಾಬ್ದಾರಿಗಳನ್ನು ಶಾಲೆಯ ಶಿಕ್ಷಕರೇ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ವಿಶೇಷ ಸಂದರ್ಭದಲ್ಲಿ ವಿ.ಎಸ್. ವಿದ್ಯಾ ಸಂಸ್ಥೆಯ ಖಜಾಂಚಿ ದೀಪಿಕಾ ಎಸ್., ಮುಖ್ಯ ಶಿಕ್ಷಕ ರಮೇಶ್, ಸಹ ಶಿಕ್ಷಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


