ತುಮಕೂರು: ಎಸ್ ಐಆರ್ (Special Intensive Revision) ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಗ್ರಾಮ ಆಡಳಿತಾಧಿಕಾರಿ ಭುವನಾ ಅವರ ಸಾವಿನ ಹಿನ್ನೆಲೆಯಲ್ಲಿ ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರಿ ನೌಕರರನ್ನು ರಾಜ್ಯದ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ಮಾಡಿ, ಅವರ ಮನವಿ ಸ್ವೀಕರಿಸಿ ಹಲವು ಭರವಸೆಗಳನ್ನು ನೀಡಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವರು ಮೊದಲು ಭುವನಾ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿ, ಅವರ ಕುಟುಂಬಕ್ಕೆ ಸಾಂತ್ವನ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅವರು, ಭುವನಾ ಅವರ ಸಾವಿಗೆ ಕಾರಣವಾದ ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಯಾವುದೇ ಹಂತದಲ್ಲಿ ಕರ್ತವ್ಯದ ಒತ್ತಡ ಅಥವಾ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಶನಿವಾರ ಚಿತ್ರದುರ್ಗದಲ್ಲಿ ಪೂರ್ವನಿಗದಿತ ಪ್ರಗತಿ ಪರಿಶೀಲನಾ ಸಭೆ ಇದ್ದ ಕಾರಣ ಹಾಗೂ ಆರೋಗ್ಯ ಸಮಸ್ಯೆಯಿಂದ ತಕ್ಷಣ ತುಮಕೂರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಉಪಮುಖ್ಯ ಮಂತ್ರಿಯವರು ತಿಳಿಸಿದರು. ಆದರೆ ಅಪಘಾತದ ಸುದ್ದಿ ತಿಳಿದ ಕೂಡಲೇ ಗಾಯಾಳುವಿಗೆ ತುರ್ತು ಚಿಕಿತ್ಸೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಹೇಳಿದರು. ದುರದೃಷ್ಟವಶಾತ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂಬುದಕ್ಕೆ ವಿಷಾದ ವ್ಯಕ್ತಪಡಿಸಿದರು.
“ತುಮಕೂರು ಜಿಲ್ಲೆಯಿಂದ ಕಂದಾಯ ಸಚಿವನಾಗಿರುವ ಎರಡನೇ ವ್ಯಕ್ತಿ ನಾನು. ನಾಲ್ಕು ದಶಕಗಳ ರಾಜಕೀಯ ಅನುಭವದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುವ ತತ್ವದೊಂದಿಗೆ ಕೆಲಸ ಮಾಡಿದ್ದೇನೆ. ಸರ್ಕಾರಿ ನೌಕರರನ್ನು ನಿರ್ಲಕ್ಷ್ಯ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಅವರು ಹೇಳಿದರು.
ಕಂದಾಯ ಇಲಾಖೆಯ ಬಡ್ತಿ ಪ್ರಕ್ರಿಯೆ ಕುರಿತು ಮಾತನಾಡಿದ ಸಚಿವರು, ಎಂಟು ವರ್ಷಗಳಿಂದ ಬಾಕಿ ಉಳಿದಿದ್ದ ತಹಶೀಲ್ದಾರ್ ಗ್ರೇಡ್-2 ರಿಂದ ಗ್ರೇಡ್-1ಕ್ಕೆ ಬಡ್ತಿಯನ್ನು ತಮ್ಮ ಅವಧಿಯಲ್ಲಿ ಪೂರ್ಣಗೊಳಿಸಲಾಗಿದೆ ಎಂದರು. ಇದೇ ರೀತಿಯಲ್ಲಿ ಒಂದು ವಾರದೊಳಗೆ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ನಿರೀಕ್ಷಕ (ಆರ್ ಐ) ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯೂ ಆರಂಭವಾಗಲಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡಿದ್ದ ಪತಿ–ಪತ್ನಿ ವರ್ಗಾವಣೆ ಪ್ರಕ್ರಿಯೆಯನ್ನು ಪುನರಾರಂಭಿಸಿರುವುದಾಗಿ ತಿಳಿಸಿದ ಅವರು, ಇಲಾಖೆಯ ವೃಂದ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿರುವ ಸಮಸ್ಯೆಗಳನ್ನು ತಿದ್ದುಪಡಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಎಸ್ ಐಆರ್ ಕಾರ್ಯಕ್ಕೆ ನೀಡಲಾಗಿದ್ದ ಕಡಿಮೆ ಅವಧಿಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಈ ಕಾರ್ಯ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಕಾಶ ನೀಡಬಹುದಾಗಿತ್ತು. ಆದರೆ ಕೇವಲ ಒಂದು ತಿಂಗಳ ಗಡುವು ನೀಡಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ತೀವ್ರ ಒತ್ತಡದಲ್ಲಿ ಕೆಲಸ ಮಾಡಬೇಕಾಯಿತು” ಎಂದು ಅಭಿಪ್ರಾಯಪಟ್ಟರು.
ಮೃತ ಭುವನಾ ಅವರ ಕುಟುಂಬಕ್ಕೆ ಚುನಾವಣಾ ಆಯೋಗದಿಂದ ₹30 ಲಕ್ಷ ಪರಿಹಾರ, 15 ದಿನಗಳೊಳಗೆ ವಿಮೆ ಮೊತ್ತ ಹಾಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ಸೇರಿದಂತೆ ಸರ್ಕಾರದಿಂದ ದೊರೆಯುವ ಎಲ್ಲ ನೆರವು ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
“ನಾವು ಮತ್ತು ನೀವು ಬೇರೆ ಬೇರೆ ಅಲ್ಲ; ಎಲ್ಲರೂ ಸೇರಿದ್ದೇ ಸರ್ಕಾರ. ಸರ್ಕಾರಿ ನೌಕರರು ಸಮಸ್ಯೆ ಇಟ್ಟುಕೊಂಡು ಕೆಲಸ ಮಾಡುವುದು ಸಾಧ್ಯವಿಲ್ಲ. ನಿಮ್ಮ ಎಲ್ಲ ಸಮಸ್ಯೆಗಳನ್ನು ಚರ್ಚಿಸಿ ಪರಿಹರಿಸುತ್ತೇವೆ. ಸದಾ ನಿಮ್ಮೊಂದಿಗೆ ಇರುತ್ತೇನೆ. ಯಾವುದೇ ವಿಷಯಕ್ಕೆ ಮುಕ್ತವಾಗಿ ನನ್ನನ್ನು ಭೇಟಿ ಮಾಡಬಹುದು” ಎಂದು ಸಚಿವರು ಹೇಳಿದರು.
ಸಚಿವರ ಭರವಸೆಯ ನಂತರ ಪ್ರತಿಭಟನಾ ನಿರತ ಸರ್ಕಾರಿ ನೌಕರರು ತಮ್ಮ ಹೋರಾಟವನ್ನು ಹಿಂಪಡೆಯುವ ನಿರ್ಧಾರ ಕೈಗೊಂಡರು. ಸರ್ಕಾರ ನೀಡಿದ ಭರವಸೆಗಳು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂಬ ನಿರೀಕ್ಷೆಯನ್ನು ನೌಕರರು ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


