ಬೆಂಗಳೂರು: ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನಮ್ಮ ಸರ್ಕಾರ ಸಿದ್ಧವಿದೆ. ಈಗಾಗಲೇ 1 ಕೋಟಿಯನ್ನು ಪ್ರತಿಯೊಬ್ಬ ಶಾಸಕರಿಗೂ ನೀಡಲು ತೀರ್ಮಾನಿಸಿದ್ದೇವೆ. ಅಲ್ಲದೇ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಪ್ರತಿ ಜಿಲ್ಲೆಗೆ 5 ಕೋಟಿ ಹಣವನ್ನು ನೀಡಿದ್ದೇವೆ. ಈಗಾಗಲೇ ಪಿಡಿ ಖಾತೆಗಳಲ್ಲಿ 329 ಕೋಟಿ ಲಭ್ಯವಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು.
“ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಲು ಎಲ್ಲಾ ಜಿಲ್ಲಾ ಪಂಚಾಯತ್ ಸಿಇಒಗಳು ವಿಬಿ-ಜಿ ರಾಮ್ ಜಿ ಯೋಜನೆಯಡಿ ಕೂಡಲೇ ಜನರಿಗೆ ಉದ್ಯೋಗ ನೀಡುವಂತೆ ಸೂಚಿಸಿದ್ದೇನೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಶೀಘ್ರವೇ ಕಾಮಗಾರಿಗಳನ್ನು ಆರಂಭಿಸುವಂತೆ ತಿಳಿಸಲಾಗಿದೆ. ಕೇಂದ್ರ ಸರ್ಕಾರಕ್ಕೆ ನಾವು ಪತ್ರ ಬರೆದಿದ್ದೇವೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗಸ್ಟ್ ತಿಂಗಳಲ್ಲಿ ಅವರು ಮನವಿಯನ್ನು ನಿರೀಕ್ಷಿಸುತ್ತಾರೆ. ಆವಾಗ ನಾವು ಮನವಿ ಸಲ್ಲಿಸಿದರೆ ಹಣವನ್ನು ಬಿಡುಗಡೆ ಮಾಡುತ್ತಾರೆ.”
— ಡಾ. ಜಿ. ಪರಮೇಶ್ವರ್, ಉಪ ಮುಖ್ಯಮಂತ್ರಿಗಳು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮತ್ತು ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನೆ ಬಾಕಿ ಇದೆ. ಬೆಂಗಳೂರು ವಿಭಾಗದಲ್ಲಿ ಜುಲೈ 25ರಂದು ನಾನು ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸುತ್ತೇವೆ. ಅದಾಗಿ ಮೈಸೂರಿನಲ್ಲಿ ಮಾಡುತ್ತೇವೆ. ಆಗ ನಮಗೆ ರಾಜ್ಯ ಪರಿಸ್ಥಿತಿಯ ಬಗ್ಗೆ ಸಂಪೂರ್ಣ ಚಿತ್ರಣ ಸಿಗುತ್ತದೆ. ಆ ಬಳಿಕ ಚರ್ಚಿಸಿ, ರೈತರಿಗೆ, ಸಾಮಾನ್ಯ ಜನರಿಗೆ ಸಮಸ್ಯೆಯಾಗದಂತೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ ಎಂದರು.
ನೀವು ಭೇಟಿ ಕೊಟ್ಟ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಮುಂಗಾರಿನಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ರೈತರು ಬೀಜ ಬಿತ್ತನೆ ಮಾಡಿದ್ದಾರೆ. ಆಮೇಲೆ ಮಳೆಯಾಗಿಲ್ಲ, ಬಿತ್ತನೆ ಮಾಡಿದ್ದೆಲ್ಲ ಒಣಗಿ ಹೋಗಿದೆ. ಈಗ ಮತ್ತೆ ಆಗಸ್ಟ್ ತಿಂಗಳಲ್ಲಿ ಮಳೆಯಾದರೆ ಬೀಜ ಬಿತ್ತನೆ ಮಾಡುತ್ತಾರೆ. ಅದೊಂದು ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ಮಾಡಲು ಅವಕಾಶ ಕೇಳಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು. ಮೊದಲ ಪರೀಕ್ಷೆಯಲ್ಲಿ ಕೆಲವರು ಉತ್ತಮ ಅಂಕಗಳನ್ನು ಪಡೆದುಕೊಂಡಿದ್ದರೂ ಎರಡನೇ ಬಾರಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದಿದೆ. ಲಕ್ಷಾಂತರ ಮಕ್ಕಳಿಗೆ ತೊಂದರೆಯಾಗಿದೆ. ಅಧಿಕಾರದಲ್ಲಿರುವವರು ಇದರ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮೋದಿಯವರು ತನಿಖೆ ಮಾಡಿಸುತ್ತೇವೆ ಎಂದು ಬಹಳ ತಡವಾಗಿ ಪ್ರತಿಕ್ರಿಯಿಸಿದ್ದಾರೆ. ವಿದ್ಯಾರ್ಥಿಗಳ ಪರವಾಗಿದ್ದೇನೆ ಎಂದು ಮೋದಿಯವರು ಹೇಳಿದ್ದಾರೆ. ಹಾಗಿದ್ದಮೇಲೆ ಧಮೇಂದ್ರ ಪ್ರಧಾನ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ. ಜವಾಬ್ದಾರಿ ಹೊತ್ತವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಮೇಲೆ ದುರ್ವರ್ತನೆ ತೋರಿದ್ದಾರೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


