ತುಮಕೂರು: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ತುಮಕೂರು ಜಿಲ್ಲೆಗೆ ನಿಗದಿಪಡಿಸಲಾದ ವಿವಿಧ ಘಟಕಗಳ ಗುರಿಗಳ ಅನುಷ್ಠಾನಕ್ಕಾಗಿ ಸ್ವೀಕರಿಸಲಾದ ಅರ್ಜಿಗಳ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಸರ್ಕಾರದ ಮಾರ್ಗಸೂಚಿಗಳನ್ವಯ ಫಲಾನುಭವಿಗಳ ಆಯ್ಕೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಕೈಗೊಳ್ಳಲಾಗಿದೆ.
ಯೋಜನೆಯಡಿ ಹೊಸದಾಗಿ ಮೀನು ಕೃಷಿ ಕೊಳ ನಿರ್ಮಾಣ, ಶಾಖ ನಿರೋಧಕ ವಾಹನ, ಜೀವಂತ ಮೀನು ಮಾರಾಟ ಕೇಂದ್ರ ಹಾಗೂ ಬಯೋಫ್ಲಾಕ್ ಸೇರಿದಂತೆ ವಿವಿಧ ಘಟಕಗಳಿಗೆ ಆಸಕ್ತ ಮೀನುಗಾರರು, ಮೀನು ಕೃಷಿಕರು, ಉದ್ಯಮಿಗಳು ಹಾಗೂ ಇತರ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನಿಗದಿತ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳು ಹಾಗೂ ದಾಖಲಾತಿಗಳನ್ನು ನಿಯಮಾನುಸಾರ ಪರಿಶೀಲಿಸಿ, ಅರ್ಹ ಅರ್ಜಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಮಂಡಿಸಿ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ.
ಯೋಜನೆಯಡಿ ನಿಗದಿಪಡಿಸಲಾದ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಅರ್ಜಿಗಳು ಸ್ವೀಕೃತವಾದ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ವಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಸಮ್ಮುಖದಲ್ಲಿ ಲಾಟರಿ ಪದ್ಧತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗದಂತೆ ಆಯ್ಕೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.
ನಿನ್ನೆ ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ನಂಜುಂಡಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಚೈತನ್ಯ, ಕೃಷಿ ವಿಜ್ಞಾನ ಕೇಂದ್ರದ ಲೋಗನಾಥನ್, ಕೃಷಿ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು, ಪ್ರಗತಿಪರ ರೈತರು ಹಾಗೂ ತುಮಕೂರು, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಮತ್ತು ಪಾವಗಡ ತಾಲೂಕುಗಳ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
ಯೋಜನೆಯಡಿ ಹೊಸದಾಗಿ ಮೀನು ಕೃಷಿ ಕೊಳ ನಿರ್ಮಾಣಕ್ಕಾಗಿ ಒಟ್ಟು 24 ಅರ್ಜಿಗಳು ಸಲ್ಲಿಕೆಯಾಗಿದ್ದು, ಎಲ್ಲಾ 24 ಅರ್ಜಿದಾರರು ಅರ್ಹರಾಗಿದ್ದ ಹಿನ್ನೆಲೆಯಲ್ಲಿ 24 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಶಾಖ ನಿರೋಧಕ ವಾಹನ ಘಟಕಕ್ಕೆ 6 ಅರ್ಜಿಗಳು ಸಲ್ಲಿಕೆಯಾಗಿದ್ದು, ಯೋಜನೆಯಡಿ ನಿಗದಿಪಡಿಸಲಾದ ಗುರಿಗೆ ಅನುಗುಣವಾಗಿ ಒಬ್ಬ ಫಲಾನುಭವಿಯನ್ನು ಆಯ್ಕೆ ಮಾಡಲಾಗಿದೆ. ಅದೇ ರೀತಿ ಜೀವಂತ ಮೀನು ಮಾರಾಟ ಕೇಂದ್ರ ಘಟಕಕ್ಕೆ 6 ಅರ್ಜಿಗಳು ಸಲ್ಲಿಕೆಯಾಗಿದ್ದು, ಒಬ್ಬ ಫಲಾನುಭವಿಯನ್ನು ಆಯ್ಕೆ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
