ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಜಲಾಶಯಗಳ ಸ್ಥಿತಿಗತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಜುಲೈ 27ರಂದು (ಸೋಮವಾರ) ಕರ್ನಾಟಕದ ಕೇಂದ್ರ ಸಚಿವರು ಹಾಗೂ ಸಂಸದರ ಪ್ರಮುಖ ಸಭೆಯನ್ನು ಕರೆದಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಹಿತಾಸಕ್ತಿಯ ಪರವಾಗಿ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತುವಂತೆ ಮನವಿ ಮಾಡಲು ಈ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಬರ ಹಾಗೂ ಜಲಾಶಯಗಳ ಪರಿಸ್ಥಿತಿ: ರಾಜ್ಯದ ಬರ ಸ್ಥಿತಿ, ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ ಹಾಗೂ ಕೇಂದ್ರ ಮಟ್ಟದಲ್ಲಿ ಬಾಕಿ ಇರುವ ವಿವಿಧ ಯೋಜನೆಗಳ ಕುರಿತು ಸಂಸದರಿಗೆ ವಿವರಣೆ ನೀಡಿ, ಕೇಂದ್ರ ಸರ್ಕಾರದ ಗಮನ ಸೆಳೆಯಲು ಮನವಿ ಮಾಡಲಾಗುವುದು.
ಕೇಂದ್ರ ಸಚಿವರಿಗೆ ಆಹ್ವಾನ: ಸಭೆಯಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲಾ ಕೇಂದ್ರ ಸಚಿವರಿಗೂ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ವಿ. ಸೋಮಣ್ಣ ಅವರೊಂದಿಗೆ ಚರ್ಚಿಸಲಾಗಿದ್ದು, ಎಚ್.ಡಿ. ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರಿಗೂ ಸಭೆಯಲ್ಲಿ ಭಾಗವಹಿಸಲು ಮನವಿ ಮಾಡುವುದಾಗಿ ಸಿಎಂ ತಿಳಿಸಿದರು.
ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ:
ಇದೇ ವೇಳೆ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ದಿನಾಂಕವನ್ನು ಘೋಷಿಸಿದ ಮುಖ್ಯಮಂತ್ರಿಗಳು, ಆಗಸ್ಟ್ 13ರಿಂದ ಅಧಿವೇಶನ ಪ್ರಾರಂಭವಾಗಲಿದೆ ಎಂದರು. ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ರಜೆಯ ನಂತರ, ಸುಮಾರು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ವಿವರಣೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
