ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ ಮಟ್ಟದ ಪ್ರಮುಖ ವಿಷಯಗಳಲ್ಲಿ ಸಚಿವರು ಹೊಣೆಗಾರಿಕೆ ವಹಿಸಿಕೊಳ್ಳುವುದನ್ನು ಇದು ಬಲಪಡಿಸುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ತುಮಕೂರು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೀಟ್ ಪರೀಕ್ಷೆಯು (NEET) ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ಪ್ರಮುಖ ಪರೀಕ್ಷೆಯಾಗಿದೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಿಂದಾಗಿ ಪರೀಕ್ಷೆಯ ವಿಶ್ವಾಸಾರ್ಹತೆಗೆ ಧಕ್ಕೆ ಉಂಟಾಗಿದ್ದು, ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿತ್ತು. ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಮತ್ತು ಸಂಬಂಧಪಟ್ಟ ಸಚಿವರು ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ವ್ಯಾಪಕವಾಗಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕಾದು ನೋಡಬೇಕಿದೆ ಎಂದರು.
ಅಧಿಕಾರದ ಉನ್ನತ ಸ್ಥಾನದಲ್ಲಿರುವವರು ತಮ್ಮ ಇಲಾಖೆಯಲ್ಲಿ ನಡೆಯುವ ಲೋಪದೋಷಗಳಿಗೆ ಉತ್ತರದಾಯಕರಾಗಬೇಕು ಎಂಬ ಸ್ಪಷ್ಟ ಸಂದೇಶವನ್ನು ಈ ನಿರ್ಧಾರ ನೀಡಿದೆ. ಸಾರ್ವಜನಿಕ ಆಡಳಿತದಲ್ಲಿ ಉತ್ತರದಾಯಿತ್ವ ಮತ್ತು ಜವಾಬ್ದಾರಿಯುತ ಸಂಸ್ಕೃತಿಯನ್ನು ಬೆಳೆಸಲು ಇದು ಉತ್ತಮ ನಾಂದಿಯಾಗಲಿದೆ ಎಂದು ಡಾ. ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
