ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಚಿಕ್ಕದೇವಮ್ಮನ ಸನ್ನಿಧಿ ಹಾಲುಗಡ ಸಮೀಪದ ಗಣೇಶನ ಗುಡಿ ವೃತ್ತದಲ್ಲಿ ನೂತನವಾಗಿ ಆರಂಭಿಸಲಾಗಿರುವ ‘ಎಂಕೆಪಿ ಬಾರ್’ ಅನ್ನು ಕೂಡಲೇ ತೆರವುಗೊಳಿಸಬೇಕೆಂದು ಆಗ್ರಹಿಸಿ ನಾಯಕ ಸಮಾಜ, ಇಟ್ನ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ತಾಲೂಕು ಆಡಳಿತದ ವಿರುದ್ಧ ತಹಶೀಲ್ದಾರ್ ಕಚೇರಿ ಮುಂಭಾಗ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿ ಪಟ್ಟಣದ ವರ್ತಕರು ತಮ್ಮ ಅಂಗಡಿ–ಮುಗ್ಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಿ ಸಾಥ್ ನೀಡಿದರು.
ಸಂತೆಮಾಸ್ತಮ್ಮ ದೇವಸ್ಥಾನದ ಮುಂಭಾಗದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಅಲ್ಲಿಂದ ಒಂದನೇ ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ತಾಲೂಕು ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ವಿವಿಧ ಘೋಷಣೆಗಳನ್ನು ಕೂಗಿದ ನಂತರ ತಹಸೀಲ್ದಾರ್ ಕಚೇರಿ ಮುಂಭಾಗ ಧರಣಿ ಕುಳಿತರು.
‘ಸೇವ್ ಕಬಿನಿ’ ಸಂಘಟನೆಯ ಸದಸ್ಯ ಹಾಗೂ ವಕೀಲ ರವಿಕುಮಾರ್ ಮಾತನಾಡಿ, “ಚಿಕ್ಕದೇವಮ್ಮನ ಹಾಲುಗಡ ಹಾಗೂ ಗಣೇಶ ಗುಡಿ ಪ್ರದೇಶವು ಧಾರ್ಮಿಕ ಪ್ರಾಮುಖ್ಯತೆ ಹೊಂದಿದ್ದು, ಸಾರ್ವಜನಿಕರು ಹಾಗೂ ಭಕ್ತಾದಿಗಳು ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಇಂತಹ ಸ್ಥಳದಲ್ಲಿ ಬಾರ್ ತೆರೆದಿರುವುದು ಭಕ್ತರ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ. ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯಾಗುತ್ತಿದ್ದು, ತಕ್ಷಣವೇ ಬಾರ್ ಪರವಾನಗಿಯನ್ನು ರದ್ದುಪಡಿಸಿ ಶಾಶ್ವತವಾಗಿ ಸ್ಥಳಾಂತರಿಸಬೇಕು. ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು” ಎಂದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ರವಿ ಮಾತನಾಡಿ, “ಧಾರ್ಮಿಕ ಕ್ಷೇತ್ರ ಅಥವಾ ಸಾರ್ವಜನಿಕ ಸ್ಥಳದಲ್ಲಿ ಕಾನೂನುಬಾಹಿರವಾಗಿ ಬಾರ್ ತೆರೆಯಲು ಅನುವು ಮಾಡಿಕೊಟ್ಟ ಅಧಿಕಾರಿಗಳು ಯಾರೇ ಆಗಿದ್ದರೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು” ಎಂದು ಭರವಸೆ ನೀಡಿದರು.
ಸ್ಥಳದಲ್ಲೇ ಎಫ್ ಐಆರ್ (FIR) ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಾಗ, ಪೊಲೀಸ್ ಇಲಾಖೆಯು ಕೊತ್ತೇಗಾಲ ಪಿಡಿಒ, ಜಮೀನಿನ ಮಾಲೀಕ ಹಾಗೂ ಬಾರ್ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ತಹಶೀಲ್ದಾರ್ ಮೋಹನಕುಮಾರಿ, ಇಓ ಪ್ರೇಮ ಕುಮಾರ್, ಡಿವೈಎಸ್ಪಿ ರವಿ, ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್ಐ ಆರ್. ಕಿರಣ್, ಜಿಪಂ ಮಾಜಿ ಸದಸ್ಯರಾದ ಚಿಕ್ಕವೀರನಾಯಕ, ಎಚ್.ಸಿ. ಲಕ್ಷ್ಮಣ್, ಉದ್ಯಮಿ ನಿಂಗರಾಜು, ಸರಗೂರು ಶಿವಣ್ಣ, ಮೊತ್ತ ಬಸವರಾಜಪ್ಪ, ಪುರಸಭೆ ಅಧ್ಯಕ್ಷ ಚಾಕಹಳ್ಳಿ ಕೃಷ್ಣ, ದೇವಸ್ಥಾನ ಸಮಿತಿ ಅಧ್ಯಕ್ಷ ದೊಡ್ಡವೀರನಾಯಕ, ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಕೆ. ಗಿರೀಶ್ ಹಾಗೂ ವಿವಿಧ ಸಮಾಜಗಳ ಯಜಮಾನರು, ರೈತ ಮುಖಂಡರು ಮತ್ತು ನೂರಾರು ಸಂಖ್ಯೆಯ ಮಹಿಳೆಯರು ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
