ತುಮಕೂರು: ನೀಟ್ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಹಾಗೂ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ದೇಶಾದ್ಯಂತ ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ನಡೆದ ಐತಿಹಾಸಿಕ ಹೋರಾಟಕ್ಕೆ ದೊರೆತ ಜಯದ ಹಿನ್ನೆಲೆಯಲ್ಲಿ, ತುಮಕೂರು ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದ ಎದುರು ಬೃಹತ್ ವಿಜಯೋತ್ಸವವನ್ನು ಆಚರಿಸಲಾಯಿತು.
ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (AIDSO) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (AIMSS) ಜಂಟಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದವು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ AIMSS ಜಿಲ್ಲಾ ಕಾರ್ಯದರ್ಶಿ ರತ್ನಮ್ಮ, “ಈ ಹೋರಾಟವು ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು, ಮಹಿಳೆಯರು ಹಾಗೂ ಶಿಕ್ಷಣಪ್ರೇಮಿಗಳ ಒಗ್ಗಟ್ಟಿನ ಹೋರಾಟಕ್ಕೆ ಸಿಕ್ಕ ಐತಿಹಾಸಿಕ ಜಯವಾಗಿದೆ. ಅನ್ಯಾಯದ ವಿರುದ್ಧ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಂಘಟಿತವಾಗಿ ಹೋರಾಡಿದಾಗ ಮಾತ್ರ ಅಧಿಕಾರಿಗಳು ಹಾಗೂ ಸರ್ಕಾರ ಜನರ ಧ್ವನಿಯನ್ನು ಆಲಿಸಲು ಸಾಧ್ಯ ಎಂಬುದನ್ನು ಈ ಹೋರಾಟ ಮತ್ತೊಮ್ಮೆ ಸಾಬೀತುಪಡಿಸಿದೆ. ಇಂತಹ ಪ್ರಜಾಸತ್ತಾತ್ಮಕ ಹೋರಾಟಗಳು ಮುಂದೆಯೂ ಮುಂದುವರೆಯಬೇಕು” ಎಂದರು.
ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ AIDSO ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ, ನೀಟ್ ಹಗರಣದಿಂದಾಗಿ ಸೃಷ್ಟಿಯಾದ ಮಾನಸಿಕ ಹಾಗೂ ಆರ್ಥಿಕ ಒತ್ತಡ ತಾಳಲಾರದೆ ದೇಶಾದ್ಯಂತ 22 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಕೇವಲ ಸಾವಲ್ಲ, ಭಾರತದ ಪ್ರಸ್ತುತ ಶಿಕ್ಷಣ ವ್ಯವಸ್ಥೆಯಿಂದಾದ ಕಗ್ಗೊಲೆ ಎಂದರು.
National Testing Agency (NTA) ಸೇರಿ ಇಡೀ ಪರೀಕ್ಷಾ ವ್ಯವಸ್ಥೆಯನ್ನು ಶಿಕ್ಷಣದ ವ್ಯಾಪಾರೀಕರಣದಿಂದ ಮುಕ್ತಗೊಳಿಸಬೇಕು. ದೇಶದ ಎಲ್ಲಾ ವಿದ್ಯಾರ್ಥಿಗಳಿಗೂ ಸಮಾನ, ವೈಜ್ಞಾನಿಕ ಹಾಗೂ ಪ್ರಜಾಸತ್ತಾತ್ಮಕ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗುವವರೆಗೂ ಈ ಹೋರಾಟ ಮುಂದುವರಿಯಲಿದೆ ಎಂದರು.
ವಿಜಯೋತ್ಸವದ ಕಾರ್ಯಕ್ರಮದಲ್ಲಿ AIDSO ಹಾಗೂ AIMSS ಸಂಸ್ಥೆಯ ಹಲವಾರು ಮುಖಂಡರು, ಸಕ್ರಿಯ ಕಾರ್ಯಕರ್ತರು ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ವಿಜಯದ ಘೋಷಣೆಗಳನ್ನು ಕೂಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
