ಸರಗೂರು: ತಾಲೂಕಿನ ಕೊತ್ತೇಗಾಲ ಗ್ರಾಮದಲ್ಲಿ ಮಧ್ಯರಾತ್ರಿ ಕಾಡು ಪ್ರಾಣಿಯೊಂದು ಕುರಿಗಳ ಕೊಟ್ಟಿಗೆಗೆ ನುಗ್ಗಿ ರಕ್ತಪಾತ ಹರಿಸಿದ ಪರಿಣಾಮ 6 ಕುರಿಗಳು ಸ್ಥಳದಲ್ಲೇ ಮೃತಪಟ್ಟು, 12 ಕುರಿಗಳು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರಲ್ಲಿ ತೀವ್ರ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ.
ಗ್ರಾಮದ ನಿವಾಸಿ ಚಲುವಮ್ಮ ಎಂಬುವರಿಗೆ ಸೇರಿದ 20 ಕುರಿಗಳನ್ನು ಎಂದಿನಂತೆ ಗುರುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು. ಮಧ್ಯರಾತ್ರಿಯ ವೇಳೆ ಕಾಡಿನಿಂದ ಬಂದಿರುವ ಶಂಕಿತ ಚಿರತೆ ಅಥವಾ ಮತ್ತಾವುದೋ ಕಾಡು ಪ್ರಾಣಿ ಏಕಾಏಕಿ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಹೆದರಿದ ಕುರಿಗಳು ಚದುರಿ ಓಡಾಡಿದ್ದು, ಶುಕ್ರವಾರ ಬೆಳಿಗ್ಗೆ ಕುಟುಂಬದವರು ನೋಡಿದಾಗ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕುರಿಗಳ ದೃಶ್ಯ ಕಂಡು ಆಘಾತಕ್ಕೊಳಗಾಗಿದ್ದಾರೆ.
ಸ್ಥಳದಲ್ಲೇ 6 ಕುರಿ ಸಾವು:
ದಾಳಿಯ ತೀವ್ರತೆಗೆ 6 ಕುರಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, 12 ಕುರಿಗಳ ಕುತ್ತಿಗೆ, ಹೊಟ್ಟೆ ಹಾಗೂ ಕಾಲುಗಳಿಗೆ ತೀವ್ರ ಗಾಯಗಳಾಗಿವೆ. ವಿಷಯ ತಿಳಿದ ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಡಾ. ಮಹೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಗಾಯಗೊಂಡ ಕುರಿಗಳಿಗೆ ತುರ್ತು ಚಿಕಿತ್ಸೆ ನೀಡಿದ್ದಾರೆ. ಕೆಲ ಕುರಿಗಳ ಸ್ಥಿತಿ ಇನ್ನು ಚಿಂತಾಜನಕವಾಗಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿವೆ. ಕೇವಲ ಎರಡು ಕುರಿಗಳು ಮಾತ್ರ ಯಾವುದೇ ಗಾಯಗಳಿಲ್ಲದೆ ಸುರಕ್ಷಿತವಾಗಿವೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಅಂತರಸಂತೆ ಉಪ ನಿರೀಕ್ಷಕ ಚಂದ್ರಹಾಸ, ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ (RFO) ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತಪಟ್ಟ ಕುರಿಗಳ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲೇ ನಡೆಸಿ ಪಂಚನಾಮೆ ಪೂರ್ಣಗೊಳಿಸಲಾಯಿತು.
ಅರಣ್ಯ ಇಲಾಖೆ ಸ್ಪಷ್ಟನೆ:
“ಘಟನೆಯ ಕುರಿತು ಸಮಗ್ರ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು. ಸರ್ಕಾರದ ನಿಯಮಾನುಸಾರ ರೈತರಿಗೆ ಸೂಕ್ತ ಪರಿಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಗ್ರಾಮದಲ್ಲಿ ಕಾಡು ಪ್ರಾಣಿಗಳ ಸಂಚಾರದ ಬಗ್ಗೆ ನಿಗಾ ವಹಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು” ಎಂದು ವಲಯ ಅರಣ್ಯಾಧಿಕಾರಿ ಲೋಕೇಶ್ ತಿಳಿಸಿದ್ದಾರೆ.
“ನಮ್ಮ ಇಡೀ ಕುಟುಂಬ ಈ ಕುರಿಗಳನ್ನು ನೆಚ್ಚಿಕೊಂಡೇ ಜೀವನ ಸಾಗಿಸುತ್ತಿತ್ತು. ಈಗ ದಾಳಿಯಿಂದ ಅಪಾರ ಆರ್ಥಿಕ ನಷ್ಟ ಉಂಟಾಗಿದ್ದು, ಜೀವನೋಪಾಯವೇ ಇಲ್ಲದಂತಾಗಿದೆ. ಸರ್ಕಾರ ಮತ್ತು ಅರಣ್ಯ ಇಲಾಖೆ ಕೂಡಲೇ ನಮಗೆ ಸೂಕ್ತ ಪರಿಹಾರ ಒದಗಿಸಬೇಕು,” ಎಂದು ಬಾಧಿತ ರೈತೆ ಚಲುವಮ್ಮ ಕಣ್ಣೀರಿಟ್ಟು ಮನವಿ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಗ್ರಾಮದ ಸುತ್ತಮುತ್ತ ಕಾಡು ಪ್ರಾಣಿಗಳ ಓಡಾಟ ಹೆಚ್ಚಾಗಿದ್ದು, ರಾತ್ರಿ ವೇಳೆ ಜಾನುವಾರುಗಳನ್ನು ರಕ್ಷಿಸುವುದು ಕಷ್ಟಕರವಾಗಿದೆ. ಅರಣ್ಯ ಇಲಾಖೆ ಕೂಡಲೇ ಗಸ್ತು ಹೆಚ್ಚಿಸಿ ಕಾಡು ಪ್ರಾಣಿಯನ್ನು ಸೆರೆಹಿಡಿಯಬೇಕು ಅಥವಾ ಕಾಡಿನೊಳಗೆ ಓಡಿಸುವ ಕ್ರಮ ಕೈಗೊಳ್ಳಬೇಕು ಎಂದು ಕೊತ್ತೇಗಾಲ ಗ್ರಾಮಸ್ಥರು ತೀವ್ರವಾಗಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳಾದ ಶೋಭಾ, ಇಮ್ರಾನ್ ಅಹಮದ್, ದೇವರಾಜು, ಕೃಷ್ಣಯ್ಯ, ಶಿವಪ್ಪ, ಜಗದೀಶ್ ಹಾಗೂ ಗ್ರಾಮದ ಮುಖಂಡರಾದ ಚಲುವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
