ತುಮಕೂರು: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರನ್ನು ಹೊಂದಿರುವ ತುಮಕೂರು ಜಿಲ್ಲೆಗೆ ಮಂತ್ರಿ ಸ್ಥಾನ ಸಿಗದಿರುವುದು ಜಿಲ್ಲಾ ಕಾಂಗ್ರೆಸ್ ನಾಯಕರು ಹಾಗೂ ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ನೇತೃತ್ವದ ಸರ್ಕಾರದಲ್ಲಿ 2ನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಉಳಿದ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಅವಕಾಶ ನೀಡದಿರುವುದು ಪಕ್ಷದೊಳಗೆ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ.
ಟಿ.ಬಿ.ಜಯಚಂದ್ರ ರಾಜೀನಾಮೆ ಸೂಚನೆ
2ನೇ ಹಂತದ ವಿಸ್ತರಣೆಯಲ್ಲಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಿರಿಯ ಶಾಸಕ ಹಾಗೂ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರಿಗೆ ಅವಕಾಶ ಕೈತಪ್ಪಿದೆ. ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವರು ಯಾವ ಮಾನದಂಡವಿಟ್ಟು ಕೃಪೆ ತೋರಿದ್ದಾರೋ ಗೊತ್ತಿಲ್ಲ. ಹಿರಿಯರು ಮತ್ತು ಪಕ್ವತೆ ಹೊಂದಿರುವ ಶಾಸಕರಿಗೆ ಅವಕಾಶ ನೀಡಬೇಕಿತ್ತು’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಮಗೆ ಅವಕಾಶ ಸಿಗದಿದ್ದಕ್ಕೆ ಸಿರಾ ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದು, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಜಯಚಂದ್ರ ಹೇಳಿದ್ದಾರೆ. ತಾವು ಮೊದಲಿನಿಂದಲೂ ಪಕ್ಷನಿಷ್ಠರಾಗಿದ್ದು, ಮತದಾರರ ತೀರ್ಮಾನಕ್ಕೆ ತಲೆಬಾಗಬೇಕಾಗುತ್ತದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ರಾಜೀನಾಮೆ ಇಂಗಿತ ಹೊರಹಾಕಿದ್ದಾರೆ.
ಕೆಎನ್ ಆರ್, ಶ್ರೀನಿವಾಸ್, ಷಡಾಕ್ಷರಿ ಬೆಂಬಲಿಗರ ನಿರಾಸೆ
ಮಾಜಿ ಸಚಿವ ಹಾಗೂ ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಬೆಂಬಲಿಗರಿಗೆ ನಿರಾಸೆಯಾಗಿದೆ. ಯುವ ಕೋಟಾದಡಿಯಲ್ಲಿ ಶಾಸಕ ಆರ್. ರಾಜೇಂದ್ರ ಅವರಿಗಾದರೂ ಅವಕಾಶ ಸಿಗಬಹುದು ಎಂಬ ಲೆಕ್ಕಾಚಾರವೂ ಸುಳ್ಳಾಗಿದೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿ ಗೆದ್ದು ಕೆಎಸ್ ಆರ್ ಟಿಸಿ ಅಧ್ಯಕ್ಷರಾಗಿರುವ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರಿಗೂ ಮಂತ್ರಿಗಿರಿ ಕೈತಪ್ಪಿದೆ. ಇನ್ನು ಹಳೆಯ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕರಾಗಿರುವ ಹಿರಿಯ ನಾಯಕ ಷಡಾಕ್ಷರಿ ಅವರು ದೆಹಲಿಗೆ ತೆರಳಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಒತ್ತಡ ಹೇರಲು ಯತ್ನಿಸಿದ್ದರು. ಆದರೆ, ಹಿರಿಯತನ ಹಾಗೂ ಪಕ್ಷನಿಷ್ಠೆಯನ್ನು ಪರಿಗಣಿಸದೆ ಅವರಿಗೂ ಸಚಿವ ಸ್ಥಾನ ನಿರಾಕರಿಸಿರುವುದು ಸಮುದಾಯ ಹಾಗೂ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ.
ಜಿಲ್ಲೆಯ 7 ಶಾಸಕರಲ್ಲಿ ಪರಮೇಶ್ವರ್ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಿ, ಉಳಿದ ಹಿರಿಯರನ್ನು ಕಡೆಗಣಿಸಿರುವುದು ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಬೆಳವಣಿಗೆಯಿಂದಾಗಿ ಮುಂದಿನ ದಿನಗಳಲ್ಲಿ ಶಾಸಕರಿಂದ ಪುನಃ ಪಕ್ಷಾಂತರಗಳು ನಡೆದರೂ ಅಚ್ಚರಿಯಿಲ್ಲ ಎಂಬ ಚರ್ಚೆ ಕೈ ಪಡೆಯೊಳಗೆ ಜೋರಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
